ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಜಾವಲಿನ್ ಪಟು ನೀರಜ್ ಚೋಪ್ರಾ ಅವರನ್ನು ಪರಿಗಣಿಸದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ನವದೆಹಲಿ(ಆ.24): ಇದೇ ಮೊದಲ ಬಾರಿಗೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನವನ್ನು 5 ಕ್ರೀಡಾಪಟುಗಳಿಗೆ ನೀಡಲಾಗುತ್ತಿದೆ. ಆದರೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಯುವ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಹೆಸರನ್ನು ಪ್ರಶಸ್ತಿಗೆ ಪರಿಗಣಿಸದೆ ಇರುವುದಕ್ಕೆ ಸಾಮಾಜಿಕ ತಾಣಗಳಲ್ಲಿ ಅನೇಕ ಕ್ರೀಡಾಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಪ್ರಶಸ್ತಿಗೆ ಕಳೆದ 4 ವರ್ಷಗಳ ಪ್ರದರ್ಶನವನ್ನು ಪರಿಗಣಿಸಲಾಗಿದೆ. ನೀರಜ್, 2016ರಲ್ಲಿ ಕಿರಿಯವ ವಿಶ್ವ ಚಾಂಪಿಯನ್ ಆಗಿದ್ದಲ್ಲದೇ, ಕಿರಿಯರ ವಿಭಾಗದಲ್ಲಿ ವಿಶ್ವ ದಾಖಲೆ ಸಹ ನಿರ್ಮಿಸಿದ್ದರು. 2017ರಲ್ಲಿ ಏಷ್ಯನ್ ಚಾಂಪಿಯನ್ಶಿಪ್ ಗೆದ್ದಿದ್ದ ನೀರಜ್, 2018ರ ಕಾಮನ್ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಜಯಿಸಿದ್ದರು. ಅಥ್ಲೇಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಜಾವಲಿನ್ ಪಟು ನೀರಜ್ ಚೋಪ್ರಾ ಅವರ ಹೆಸರನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು. 2021ರ ಒಲಿಂಪಿಕ್ಸ್ಗ ಅರ್ಹತೆ ಗಳಿಸಿರುವ ನೀರಜ್ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.
ಮೊದಲೆಲ್ಲಾ ನಾವು ಪ್ರಶಸ್ತಿಗಳನ್ನು ಗಳಿಸುತ್ತಿದ್ದೆವು, ಆದರೆ ಈಗ ಅರ್ಜಿ ಹಾಕಿ ಪ್ರಶಸ್ತಿ ಪಡೆಯುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇಯ ಕ್ರೀಡಾಪಟುವೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.
ರೋಹಿತ್ ಶರ್ಮಾ, ರಾಣಿ ಸೇರಿ ಐವರಿಗೆ ಖೇಲ್ ರತ್ನ ಪ್ರಶಸ್ತಿ ಗೌರವ
ಈ ಬಾರಿ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ, ಕುಸ್ತಿಪಟು ವಿನೇಶಾ ಫೋಗಟ್, ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಭಾತ್ರ, ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಮತ್ತು ಪ್ಯಾರಾ ಅಥ್ಲೀಟ್ ಮರಿಯಪ್ಪನ್ ತಂಗವೇಲು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ವೇಳೆ ರೋಹಿತ್ಗೆ ಖೇಲ್ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ರೋಹಿತ್ಗಿಂತ ಯುವರಾಜ್ ಸಿಂಗ್ ಅವರು ಈ ಪ್ರಶಸ್ತಿಗೆ ಹೆಚ್ಚು ಅರ್ಹವಾದ ವ್ಯಕ್ತಿ ಎನ್ನುವ ಮಾತುಗಳು ಕೇಳಿ ಬಂದಿವೆ.
