ಏಷ್ಯಾಕಪ್ ಟೂರ್ನಿಯಿಂದ ವಿಶ್ರಾಂತಿ ಪಡೆದಿರುವ ನಾಯಕ ವಿರಾಟ್ ಕೊಹ್ಲಿ, ಇದೀಗ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಕೊಹ್ಲಿಗೆ ರಾಷ್ಟ್ರಪತಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ನವದೆಹಲಿ(ಸೆ.25): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2018ರ ಕ್ರೀಡಾ ಕ್ಷೇತ್ರದ ಅತ್ಯುನ್ನತ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೊಹ್ಲಿ ಪ್ರಶಸ್ತಿ ಪ್ರಧಾನ ಮಾಡಿದರು.
ವಿರಾಟ್ ಕೊಹ್ಲಿ ಜೊತೆ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಮಹಿಳಾ ವೇಟ್ಲಿಫ್ಟರ್ ಮೀರಾ ಭಾಯಿ ಚಾನು ಖೇಲ್ ರತ್ನ ಪ್ರಶಸ್ತಿ ಪಡೆದಿದ್ದಾರೆ. ಕಾಮನ್ ವೆಲ್ಸ್, ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಜಾವಲಿನ್ ಥ್ರೋವರ್ ನೀರಜ್ ಚೋಪ್ರಾ, ಓಟಗಾರ್ತಿ ಹಿಮಾ ದಾಸ್, ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನ, ಕನ್ನಡಿಗ ಟೆನಿಸ್ ಪಟು ರೋಹನ್ ಬೋಪಣ್ಣ ಸೇರಿದಂತೆ 20 ಕ್ರೀಡಾಪಟುಗಳು ಅರ್ಜುನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬಾಕ್ಸಿಂಗ್ ಕೋಚ್ ಕನ್ನಡಿಗ ಚೆನಂದ ಅಚ್ಚಯ್ಯ ಕುಟ್ಟಪ್ಪ, ವೇಟ್ಲಿಫ್ಟರ್ ಕೋಚ್ ವಿಜಯ್ ಶರ್ಮಾ ಸೇರಿದಂತೆ 8 ಮಾರ್ಗದರ್ಶಕರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಎಲ್ಲರಿಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
