7000 ಅನುದಾನಿತ ಶಿಕ್ಷಕರ ನೇಮಕಕ್ಕೆ  ಶೀಘ್ರದಲ್ಲಿಯೇ  ಸರ್ಕಾರ ಮುಂದಾಗಬೇಕು ಎಂದು  ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ  ಆಗ್ರಹಿಸಿದೆ.

ಬೆಂಗಳೂರು (ಜು.16): ರಾಜ್ಯದ ಅನುದಾನಿತ ಶಾಲೆಗಳಲ್ಲಿ ಖಾಲಿ ಉಳಿದಿರುವ ಏಳು ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಬೇಕೆಂದು ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವೈ.ಎಚ್‌.ಹುಚ್ಚಯ್ಯ, ರಾಜ್ಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3,740 ಕನ್ನಡ ಮಾಧ್ಯಮದ ಅನುದಾನಿತ ಪ್ರೌಢಶಾಲೆಗಳಿದ್ದು, 10 ಲಕ್ಷಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಸುಮಾರು ಏಳು ವರ್ಷಗಳಿಂದ ಈ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿಲ್ಲ. ಸುಮಾರು 7,045 ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ನೇಮಕಾತಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

Add Asianetnews Kannada as a Preferred SourcegooglePreferred

ಅನುದಾನಿತ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಬಡವಿದ್ಯಾರ್ಥಿಗಳೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಕರ ಕೊರತೆಯಿಂದಾಗಿ, ಗಣಿತ, ವಿಜ್ಞಾನ, ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಲ್ಲಿ ಮಕ್ಕಳು ವಂಚಿತರಾಗುತ್ತಿದ್ದಾರೆ. ನೇಮಕಾತಿ ಸಂಬಂಧ 7 ವರ್ಷದಿಂದ ಮುಖ್ಯಮಂತ್ರಿ, ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಅವರೆಲ್ಲರೂ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು ನೇಮಕಾತಿಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾಯಂ ಶಿಕ್ಷಕರ ಕೊರತೆ ನೀಗಿಸಲು ಕ್ರಮ:  ಇನ್ನು ರಾಜ್ಯದಲ್ಲಿ ಕಾಯಂ ಶಿಕ್ಷಕರ ಕೊರತೆ ಇದೆ. ಆದರೆ, ಇತಿಹಾಸದಲ್ಲಿ 36 ಸಾವಿರ ಅತಿಥಿ ಶಿಕ್ಷಕರನ್ನು ಶಾಲೆ ಪ್ರಾರಂಭದಲ್ಲಿಯೇ ನೀಡಿ, ಶೈಕ್ಷಣಿಕ ವ್ಯವಸ್ಥೆ ಸುಗಮಗೊಳಿಸುವ ಪ್ರಯತ್ನ ನಮ್ಮ ಸರ್ಕಾರ ಮಾಡಿದೆ. ಈಗಾಗಲೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಶಿಕ್ಷಣ ಇತರೇ ಇಲಾಖೆಯಂತೆ ಅಲ್ಲ. ಗುಣಮಟ್ಟದ ಶಿಕ್ಷಣ ನೀಡಲು ಗುಣಮಟ್ಟದ ಶಿಕ್ಷಕರ ಅಗತ್ಯ ಇರುತ್ತದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದ್ದು ಮುಂದಿನ ಒಂದೆರಡು ತಿಂಗಳಿನಲ್ಲಿ ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.