ಬೆಂಗಳೂರು ಹಾಗೂ ಸುತ್ತಮುತ್ತಲ ನಾಲ್ಕೇ ಜಿಲ್ಲೆಗಳ ಎಸಿ ವ್ಯಾಪ್ತಿಯ ಅರೆ ನ್ಯಾಯಾಲಯದಲ್ಲಿ 13 ಸಾವಿರ ದಷ್ಟು(ಶೇ.69) ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಬಾಕಿ ಉಳಿಸಿಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳನ್ನುತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು : ಬೆಂಗಳೂರು ಹಾಗೂ ಸುತ್ತಮುತ್ತಲ ನಾಲ್ಕೇ ಜಿಲ್ಲೆಗಳ ಎಸಿ ವ್ಯಾಪ್ತಿಯ ಅರೆ ನ್ಯಾಯಾಲಯದಲ್ಲಿ 13 ಸಾವಿರ ದಷ್ಟು(ಶೇ.69) ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಬಾಕಿ ಉಳಿಸಿಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳನ್ನುತರಾಟೆಗೆ ತೆಗೆದುಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಅಲ್ಲದೆ, ಮಾರ್ಚ್ ಅಂತ್ಯದೊಳಗೆ ಆರು ತಿಂಗಳು ಮೀರಿದ ಎಲ್ಲಾ ಕೇಸ್‌ಗಳನ್ನು ಕಡ್ಡಾಯವಾಗಿ ಮುಗಿಸಲು ಖಡಕ್‌ ಸೂಚನೆ ನೀಡಿದ್ದಾರೆ. ಪ್ರತಿ ಶನಿವಾರ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಮೇಲ್ವಿಚಾರಣೆ ನಡೆಸುವಂತೆಯೂ ಇದೇ ವೇಳೆ ನೂತನ ಕಂದಾಯ ಆಯುಕ್ಷೆ ಮೀನಾ ನಾಗರಾಜ್ ಸಿ.ಎನ್. ಅವರಿಗೆ ಸೂಚಿಸಿದ್ದಾರೆ.

ಮಾಸಿಕ ಪ್ರಗತಿ ಪರಿಶೀಲನಾ ಸಭೆ

ವಿಕಾಸಸೌಧದಲ್ಲಿ ಬುಧವಾರ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳ ಎಸಿಗಳ ಕೋರ್ಟುಗಳಲ್ಲಿ 19 ಸಾವಿರ ಕೇಸುಗಳು ಇತ್ಯರ್ಥಕ್ಕೆ ಬಾಕಿ ಇದ್ದರೆ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ (ರಾಮನಗರ) ಮತ್ತು ತುಮಕೂರು ಈ ನಾಲ್ಕು ಜಿಲ್ಲೆಗಳಲ್ಲೇ 13 ಸಾವಿರ ದಷ್ಟು ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಕಂಡು ತೀವ್ರ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು

ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿ ಇದ್ದರೆ, ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ನಾನು ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6,000 ಪ್ರಕರಣಗಳು ಮಾತ್ರ ಬಾಕಿ ಇದ್ದು, ಈ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ತಮ್ಮ ಕೆಲಸಕ್ಕೆ ವೇಗ ನೀಡಿದರೆ ಮಾತ್ರ ರಾಜ್ಯಮಟ್ಟದಲ್ಲಿ ಪ್ರಶ್ನಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಳೆದ ಅಕ್ಟೋಬರ್‌ನಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ 15,364 ಪ್ರಕರಣಗಳು ಬಾಕಿ ಇದ್ದದ್ದು ಈಗ 13,610ಕ್ಕೆ ಇಳಿದಿರುವುದು ಉತ್ತಮ ಬೆಳವಣಿಗೆ. ಆದರೂ, ಮಿಸ್ಸಿಂಗ್ ರೆಕಾರ್ಡ್‌ ಗಳು, ಆರ್ಸಿಸಿ ಎಂಎಸ್‌ನಲ್ಲಿ ವಿಲೇವಾರಿ ಆಗದ ಪ್ರಕರಣಗಳು ಹಾಗೂ ಅನರ್ಹ (ಅನ್ಫಿಟ್) ಪ್ರಕರಣಗಳು ಹಾಗೂ ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನು ಜನವರಿ ಅಂತ್ಯದೊಳಗೆ ಮುಗಿಸಿದರೆ ಈ ಸಂಖ್ಯೆ ಮತ್ತಷ್ಟು ಸುಧಾರಿಸುತ್ತದೆ ಎಂದು ಸಲಹೆ ನೀಡಿದರು. ಫೆಬ್ರವರಿ ಮೊದಲ ವಾರದಲ್ಲಿ ಈ ನಾಲ್ಕು ಜಿಲ್ಲೆಗಳ ಮತ್ತೊಂದು ಸಭೆ ನಡೆಸಿ, ಅದರ ಆಧಾರದಲ್ಲಿ ರಾಜ್ಯಾದ್ಯಂತದ ಎಲ್ಲಾ ಎಸಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಸಭೆಯಲ್ಲಿ ಇಲಾಖಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.