ಸಂಪುಟ ವಿಸ್ತರಣೆ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೂತನ ಸಚಿವರಿಗೆ ತಮಗೆ ವಹಿಸಿದ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿ ಪರಿಶೀಲಿಸಲು ಸೂಚಿಸಿದರು.

  • ಸಂಪುಟ ವಿಸ್ತರಣೆ ಬಳಿಕ ಮೊದಲ ಸಂಪುಟ ಸಭೆ 
  • ಸರ್ಕಾರದ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ
  •  ಪಕ್ಷದ \B\Bಜನಪ್ರತಿನಿಧಿಗಳ ಜತೆ ಪರಿಶೀಲನೆ ನಡೆಸಿ
  •  ಬಳಿಕ ಕಂದಾಯ ಸಚಿವರಿಗೆ ವರದಿ ಸಲ್ಲಿಸಿ: ಸಿಎಂ 

ಬೆಂಗಳೂರು (ಆ.೪): ತಮ್ಮ ಸಂಪುಟ ಸೇರಿರುವ ಎಲ್ಲಾ 19 ಮಂದಿ ಹೊಸ ಸಚಿವರು ಬುಧವಾರದಿಂದಲೇ ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಸ್ಥಳ ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.

ಸುಮಾರು 2 ಗಂಟೆ ಕಾಲ ಸಚಿವ ಸಂಪುಟದ ನೂತನ ಸದಸ್ಯರಿಗೆ ಮಾರ್ಗದರ್ಶನ ನೀಡಿದ್ದೇವೆ. ಸರ್ಕಾರದ ಮುಂದಿರುವ ಸವಾಲು, ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಹೊಸ ಸಚಿವರಿಗೆ ಮಾರ್ಗದರ್ಶನ ನೀಡಲಾಗಿದೆ. ಬರಗಾಲ ಹಾಗೂ ಕಾವೇರಿ ಭಾಗದ ಪ್ರದೇಶದಲ್ಲಿ ನೀರಿನ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇವೆ. ಹೊಸ ಸಚಿವರಿಗೆ ಮಂಗಳವಾರ ಮಾತ್ರ ಸಮಯಾವಕಾಶ. ಬುಧವಾರದಿಂದ ತಮಗೆ ವಹಿಸುವ ಜಿಲ್ಲೆಗಳಿಗೆ ನೆರೆ, ಬರ ಪರಿಶೀಲನೆಗೆ ಪಕ್ಷಾತೀತವಾಗಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಸ್ಥಳ ಪರಿಶೀಲಿಸಿ ಕಂದಾಯ ಸಚಿವರಿಗೆ ವರದಿ ನೀಡಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಗೂ ಪ್ರತ್ಯೇಕ ವರದಿ ನೀಡಲು ನಿರ್ದೇಶನ ನೀಡಲಾಗಿದೆ. ವರದಿಗಳು ಬಂದ ಬಳಿಕ ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ವಿಪಕ್ಷ ನಾಯಕರಿಗೆ ಉತ್ತರ: 

ವಿರೋಧ ಪಕ್ಷದ ನಾಯಕರು ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅವರು ಕಂದಾಯ ಸಚಿವರಾಗಿದ್ದವರು. ಸಾಕಷ್ಟು ಅನುಭವಸ್ಥರು. ಅವರಿಗೆ ಸಮಯ ಬಂದಾಗ ಉತ್ತರ ನೀಡೋಣ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರವಾದ ಜಲ ಕಂಟಕ ಎದುರಾಗಿತ್ತು. ದೇವರ ಕೃಪೆಯಿಂದ ಇದು ಸಧ್ಯಕ್ಕೆ ನಿವಾರಣೆಯಾಗಿದೆ. ತಮಿಳುನಾಡಿಗೆ 3,500 ಕ್ಯುಸೆಕ್‌ ನೀರು ಹರಿಸಬೇಕಿತ್ತು. ಮಳೆ ಬಂದು ಕಾವೇರಿ ಕೊಳ್ಳದ ಕೆಲ ಜಲಾಶಯ ತುಂಬಿದ್ದರಿಂದ 30 ಸಾವಿರ ಕ್ಯುಸೆಕ್‌ ನೀರು ಹರಿಯುತ್ತಿದೆ. ಕೆಆರ್‌ಎಸ್‌, ಹೇಮಾವತಿ ತುಂಬಿಲ್ಲ, ಒಳಹರಿವು ಹೆಚ್ಚಿದೆ. ಮಲೆನಾಡಿನಲ್ಲಿ ಮಳೆ ಬೀಳುತ್ತಿದ್ದು, ತುಂಗಭದ್ರಾಗೆ ಇನ್ನು ನೀರು ಬರಬೇಕು. ಆಲಮಟ್ಟಿಯಲ್ಲಿ ನೀರಿನ ಹರಿವು ಇದೆ. ಬರಗಾಲದ ಛಾಯೆ ಇನ್ನೂ ಇದೆ. ಮಳೆಯಿಂದಾಗಿ ಶಿವಮೊಗ್ಗ, ತೀರ್ಥಹಳ್ಳಿ ಭಾಗದಲ್ಲಿ ಅನಾಹುತಗಳು ಆಗಿವೆ. ನಾನು ವರದಿ ತರಿಸಿಕೊಂಡು ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಶೀಘ್ರ ಮೈಸೂರು ವಿಭಾಗದ ಸಭೆ:

ಈಗಾಗಲೇ ಬೆಳಗಾವಿ, ಚಿತ್ರದುರ್ಗ, ಕಲಬುರಗಿ ವಿಭಾಗಗಳಲ್ಲಿ ಸಭೆ ಮಾಡಿದ್ದೇನೆ. ಮೈಸೂರು ವಿಭಾಗದ ಸಭೆಯನ್ನು ಶೀಘ್ರವೇ ಮಾಡಲಾಗುವುದು. ಎಲ್ಲರ ಸಲಹೆ ಪಡೆಯಲಾಗಿದ್ದು, ಕುಡಿಯುವ ನೀರಿನ ಉದ್ದೇಶಕ್ಕೆ ಪ್ರತಿ ವಿಧಾನಸಭೆಗೆ 1 ಕೋಟಿ ಅನುದಾನ ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಆರೋಗ್ಯ ಸಚಿವ ಯು.ಟಿ.ಖಾದರ್‌ ಉಪಸ್ಥಿತರಿದ್ದರು.