ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಮಂಗಳೂರು ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಮಸೀದಿ ಮುಂಭಾಗ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಮಸೀದಿ ಅಧ್ಯಕ್ಷ  ಬಿಜೆಪಿ ಕಾರ್ಯಕರ್ತರ ವಿರುದ್ಧವೇ ದೂರು ನೀಡಿದ್ದಾರೆ.

ದಕ್ಷಿಣ ಕನ್ನಡ (ಜೂ.10): ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ನಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಜೊತೆಗೆ ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಡಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Add Asianetnews Kannada as a Preferred SourcegooglePreferred

ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ನೀಡಿರುವ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ, ನಿನ್ನೆ ರಾತ್ರಿ 8.50 ರ ಸುಮಾರಿಗೆ ಕೆಲ ಯುವಕರು ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿದ್ದಾರೆ. ಘೋಷಣೆ ಕೂಗುವ ವೇಳೆ ಮಸೀದಿ ಬಳಿ ನಿಂತಿದ್ದವರಿಗೂ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಾದ ಸುರೇಶ್, ವಿನಯ್, ಸುಭಾಷ್, ರಂಜಿತ್ ಹಾಗೂ ಧನಂಜಯ್ ವಿರುದ್ಧ ಐಪಿಸಿ ಸೆಕ್ಷನ್ ಐಪಿಸಿ 143, 147, 148, 153A, 504, 506, 149ರಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿರುವ ಕೊಣಾಜೆ ಠಾಣೆ ಪೊಲೀಸರು.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆಲ್ಲಲು ಕೋಮುವಾದ ಕಾರಣ: ದಿನೇಶ್ ಗುಂಡೂರಾವ್

ನಡೆದಿದ್ದೇನು?

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ನಿನ್ನೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದರು. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲೂ ವಿಜಯೋತ್ಸವ ಮೆರವಣಿಗೆ ನಡೆಸಿದ್ದ ಕಾರ್ಯಕರ್ತರು. ಆದರೆ ಈ ವೇಳೆ ಮಸೀದಿ ಬಳಿ ಪ್ರಚೋದನಾಕಾರಿ ಘೊಷಣೆ ಕೂಗಿದ್ದಾರೆ ಎಂದು ಆರೋಪಿಸಿ 20-25 ಬೈಕ್‌ಗಳಲ್ಲಿ ಮುಸ್ಲಿಂ ಯುವಕರ ತಂಡ ಕಾರ್ಯಕರ್ತರನ್ನ ಹಿಂಬಾಲಿಸಿ ಬಂದು. ಬೊಳಿಯಾರ್ ಬಾರ್ ಮುಂಭಾಗ ಚಾಕು ಇರಿದು ಪರಾರಿಯಾಗಿದ್ದರು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಘಟನೆ ಸಂಬಂಧ ಆರೋಪಿಗಳಾದ ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ ಹಫೀಝ್(24) ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಘಟನೆಗೆ ಬಿಜೆಪಿ ಕಾರ್ಯಕರ್ತರ ಪ್ರಚೋದನಕಾರಿ ಘೋಷಣೆ ಕಾರಣವೆಂದು ಕಾರ್ಯಕರ್ತರ ವಿರುದ್ಧವೇ ದೂರು ದಾಖಲಿಸಲಾಗಿದೆ.