Asianet Suvarna News Asianet Suvarna News

ಸಿದ್ದು ಸರ್ಕಾರದಿಂದ ಅಲ್ಪಸಂಖ್ಯಾತರಿಗೆ 3200 ಕೋಟಿ ನೆರವು: ಸಚಿವ ಜಮೀರ್‌ ಅಹಮದ್‌

ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರು. ಒದಗಿಸಿದ್ದು, ಈ ಪೈಕಿ 1480 ಕೋಟಿ ರು.ಗಳನ್ನು ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ ಆಗಿದೆ: ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ 

3200 crore assistance to minorities in Karnataka Says Minister Zameer Ahmed Khan grg
Author
First Published Sep 12, 2024, 12:46 PM IST | Last Updated Sep 12, 2024, 12:46 PM IST

ಬೆಂಗಳೂರು(ಸೆ.12): ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಹೆಚ್ಚು ಆದ್ಯತೆ ನೀಡಿದ್ದು, 3200 ಕೋಟಿ ರು.ಗಳ ಅನುದಾನವನ್ನು ನೀಡಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು. ಬುಧವಾರ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ(ಕೆಎಂಡಿಸಿ) ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರು. ಒದಗಿಸಿದ್ದು, ಈ ಪೈಕಿ 1480 ಕೋಟಿ ರು.ಗಳನ್ನು ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ ಆಗಿದೆ ಎಂದು ಹೇಳಿದರು.

ಟಗರು ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸೋದು ಸಾಧ್ಯವಿಲ್ಲ: ಸಚಿವ ಜಮೀರ್ ಅಹ್ಮದ್

ರಾಜ್ಯದಲ್ಲಿ ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಪ್ರತಿ ಕುಟುಂಬಕ್ಕೂ ಸೂರು ಕಲ್ಪಿಸುವುದು ನಮ್ಮ ಸರ್ಕಾರದ ಸಂಕಲ್ಪ. ಸಿದ್ದರಾಮಯ್ಯ ಅವರ ಬಡವರ ಪರ ಕಾಳಜಿಯಿಂದ ಅದು ಸಾಧ್ಯ ವಾಗಲಿದೆ. ಈಗಾಗಲೇ 2.32 ಲಕ್ಷ ಬಡವರಿಗೆ ಮನೆ ಕಟ್ಟಿಕೊಡುವ ಕ್ರಾಂತಿಕಾರಕ ನಿರ್ಧಾರ ಮಾಡಲಾಗಿದೆ ಎಂದರು.

ವಕ್ಫ್‌ ಬೋರ್ಡ್‌ನಲ್ಲೂ ಅನ್ವರ್ ಬಾಷಾ ಅಧ್ಯಕ್ಷರಾಗಿ ಉತ್ತಮ ಸಹಕಾರ ಕೊಡುತ್ತಿರುವುದರಿಂದ ವಕ್ಫ್‌ ಆಸ್ತಿ ಸಂರಕ್ಷಣೆ ಕಾರ್ಯ ಮಾಡಲಾಗುತ್ತಿದೆ. ಹಜ್ ಯಾತ್ರಿಗಳ ಸೇವೆ ಸಲ್ಲಿಸಿದ ಸ್ವಯಂ ಸೇವಕರನ್ನು ವೈಯಕ್ತಿಕವಾಗಿ ಉಮ್ರಾ ಯಾತ್ರೆಗೆ ಕಳುಹಿಸಲಾಗುತ್ತಿದ್ದು, ಈ ಬಾರಿಯೂ 220 ಮಂದಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮೌಲಾನಾ ಮಕ್ಸುದ್ ಇಮ್ರಾನ್, ಸಚಿವ ರಹೀಮ್ ಖಾನ್, ಮಾಜಿ ಸಚಿವ ಹಿಂಡಸಗೇರಿ ಶಾಸಕ ರಾದ ಇಕ್ಬಾಲ್ ಹುಸೇನ್, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜ, ಬಿಲ್ಕಿಸ್ ಬಾನು, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಕೆಎಂಡಿಸಿ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 177 ಆಟೋ ರಿಕ್ಷಾ, 68 ಟ್ಯಾಕ್ಸಿ, 30 ಗೂಡ್ಸ್ ವಾಹನ ಸೇರಿ 579 ಮಂದಿಗೆ 7.86 ಕೋಟಿ ರು. ಮೊತ್ತದ ಸವಲತ್ತು ವಿತರಿಸಲಾಯಿತು.

Latest Videos
Follow Us:
Download App:
  • android
  • ios