ಕಳೆದ ತಿಂಗಳು ಸಂಗ್ರಹಿಸಲಾಗಿದ್ದ 175 ಹಾಲಿನ ಮಾದರಿಗಳ ಪೈಕಿ 73 ಮಾದರಿಗಳ ವರದಿ ಬಂದಿದ್ದು, ಈ ಪೈಕಿ ನಾಲ್ಕು ಮಾದರಿಗಳ ಗುಣಮಟ್ಟ ಕಡಿಮೆ ಎಂಬುದಾಗಿ ಉಲ್ಲೇಖವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರು (ಆ.05): ಕಳೆದ ತಿಂಗಳು ಸಂಗ್ರಹಿಸಲಾಗಿದ್ದ 175 ಹಾಲಿನ ಮಾದರಿಗಳ ಪೈಕಿ 73 ಮಾದರಿಗಳ ವರದಿ ಬಂದಿದ್ದು, ಈ ಪೈಕಿ ನಾಲ್ಕು ಮಾದರಿಗಳ ಗುಣಮಟ್ಟ ಕಡಿಮೆ ಎಂಬುದಾಗಿ ಉಲ್ಲೇಖವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯ ಪ್ರಗತಿಯಲ್ಲಿದೆ. ಅಂತೆಯೇ ಇನ್ನೂ ಹೆಚ್ಚಿನ ಹಾಲಿನ ಮಾದರಿಗಳ ಸಂಗ್ರಹಣೆ ಮತ್ತು ವಿಶ್ಲೇಷಣೆಗಾಗಿ ಈ ತಿಂಗಳಲ್ಲಿ ಕೆಎಂಎಫ್ ಜತೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಳೆದ ಜುಲೈನಲ್ಲಿ 3,489 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಿಸಲಾಗಿದೆ. ಈ ಪೈಕಿ 17 ಮಾದರಿಗಳು ಅಸುರಕ್ಷಿತ ಮತ್ತು 18 ಮಾದರಿಗಳು ಕಡಿಮೆ ಗುಣಮಟ್ಟ ಎಂದು ವರದಿಯಾಗಿದೆ. ಅಂತೆಯೇ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಕುರಿತು ರಾಜ್ಯದ 1,557 ಬೀದಿ ಬದಿ ವ್ಯಾಪಾರ ಘಟಕಗಳಲ್ಲಿ ತಪಾಸಣೆ ನಡೆಸಲಾಗಿದೆ. ಈ ಪೈಕಿ ಲೋಪ ಕಂಡು ಬಂದ 406 ಘಟಕಗಳಿಗೆ ನೋಟಿಸ್ ಜಾರಿಗೊಳಿಸಿ, 44 ಸಾವಿರ ರು. ದಂಡ ವಿಧಿಸಲಾಗಿದೆ ಎಂದರು.
99 ಆಹಾರ ಮಾದರಿ ಸಂಗ್ರಹ: ರಾಜ್ಯದಲ್ಲಿ 186 ಬಸ್ ನಿಲ್ದಾಣಗಳಲ್ಲಿನ 889 ಆಹಾರ ಮಳಿಗೆಗಳನ್ನು ತಪಾಸಣೆ ನಡೆಸಲಾಗಿದೆ. ಈ ಪೈಕಿ ಲೋಪ ಕಂಡ ಬಂದ 206 ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಿ, 55 ಸಾವಿರ ರು. ದಂಡ ವಿಧಿಸಲಾಗಿದೆ. ಅಂತೆಯೆ 99 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ನೀರಿಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಅಂತೆಯೇ ರಾಜ್ಯದ 603 ಅಂಗನವಾಡಿ ಕೇಂದ್ರಗಳನ್ನು ಪರಿಶೀಲಿಸಿದ್ದು, 545 ಆಹಾರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು.
ಪ್ರತ್ಯೇಕ ಆರೋಗ್ಯನೀತಿ ಶೀಘ್ರ: ಸಾರ್ವಜನಿಕರ ಹಿತದೃಷ್ಟಿಯಿಂದ ಶೀಘ್ರವೇ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಗೋವಿಂದರಾಜನಗರ ಕ್ಷೇತ್ರದಲ್ಲಿರುವ ಬಿಬಿಎಂಪಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ‘ಆಶಾಕಿರಣ ಶಾಶ್ವತ ದೃಷ್ಟಿ ಕೇಂದ್ರ’ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ಧಪಡಿಸುತ್ತಿದ್ದು, ಎರಡು ಮೂರು ವಾರದಲ್ಲಿ ವರದಿ ಸಲ್ಲಿಕೆ ಆಗಲಿದೆ. ಬಿಬಿಎಂಪಿ ಅಡಿ ನಗರದ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ನಿರ್ವಹಣೆ ಆಗುತ್ತಿದ್ದರೆ, ವೈದ್ಯಕೀಯ ಇಲಾಖೆಯಿಂದ ವೈದ್ಯರು, ಸಿಬ್ಬಂದಿ ಇರುತ್ತಿದ್ದರು.
ಇದರಿಂದ ಸಾಕಷ್ಟು ಗೊಂದಲ ಉಂಟಾಗಿ ಕಾರ್ಯವೈಖರಿ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಲು ಹಾಗೂ ನಗರದ ಜನತೆಯ ಹಿತದೃಷ್ಟಿಯಿಂದ ಪ್ರತ್ಯೇಕ ಆರೋಗ್ಯ ನೀತಿ ರೂಪಿಸಲಾಗುತ್ತಿದೆ ಎಂದು ಹೇಳಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಐದು ಕೇಂದ್ರಗಳು ಸೈಟ್ ಸೇವರ್ಸ್ ಇಂಡಿಯಾ ಕಂಪನಿಯ ಸಿಎಸ್ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕ ವಿತರಣೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಒನ್ಸೈಟ್ ಎಸ್ಸಿಲೊರ್ ಲುಕ್ಸೊಟಿಕಾ ಫೌಂಡೇಷನ್ ಸೇರಿ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪನೆ ಆಗಿವೆ.
