ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. 

ಮಂಡ್ಯ (ಮಾ.09): ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. 200 ಎಕರೆ ವಿಸ್ತಾರವಾದ ಜಾಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಬೃಹತ್‌ ವೇದಿಕೆ ಹಾಗೂ ವಿಶಾಲವಾದ ಸ್ಥಳದಲ್ಲಿ ಜರ್ಮನ್‌ ಟೆಂಟ್‌ಗಳು ತಲೆ ಎತ್ತಿ ನಿಂತಿವೆ. ಈ ಬಗ್ಗೆ ಮಾಹಿತಿ ನೀಡಿದ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ, ಮಂಡ್ಯದ ಪ್ರವಾಸಿಮಂದಿರದಿಂದ ತೆರೆದ ವಾಹನದಲ್ಲಿ ಎಸ್‌.ಡಿ.ಜಯರಾಂ ವೃತ್ತ (ನಂದಾ ಸರ್ಕಲ್‌)ದವರೆಗೆ ಅವರು ರೋಡ್‌ ಶೋ ನಡೆಸಲಿದ್ದು, ರೋಡ್‌ ಶೋ ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ, ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರುವುದಕ್ಕೆ 4,000 ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಮಾರಂಭ ನಡೆಯುವ ಜಾಗದಲ್ಲೇ ಸುಮಾರು 2,000 ಬಸ್‌ಗಳು ನಿಲ್ಲುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುತ್ತಮುತ್ತಲ ಗ್ರಾಮಗಳಿಂದ ಸುಗಮವಾಗಿ ಸ್ಥಳ ತಲುಪಲು ಎರಡು ಕಡೆ ಹೊಸದಾಗಿ ರಸ್ತೆಯನ್ನೇ ನಿರ್ಮಿಸಲಾಗಿದೆ. ಭದ್ರತೆ ದೃಷ್ಟಿಯಿಂದ 2,200 ರಿಂದ 2,300 ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಮೋದಿ ಸೇರಿದಂತೆ ಕೇಂದ್ರ ನಾಯಕರು, ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಬರುವುದಕ್ಕೆ ಪೂರಕವಾಗುವಂತೆ 9 ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು: ಜೆ.ಪಿ.ನಡ್ಡಾ ಟೀಕಾ ಪ್ರಹಾರ

12 ರಂದು ಮೈಸೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮನ: ಪ್ರಧಾನಿ ನರೇಂದ್ರ ಮೋದಿ ಅವರು ಮಾ. 12 ರಂದು ಬೆಳಗ್ಗೆ 11.10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಹೆಲಿಕಾಪ್ಟರ್‌ ಮೂಲಕ ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಉದ್ಘಾಟಿಸಲು ಮಂಡ್ಯ ಜಿಲ್ಲೆಗೆ ತೆರಳುವರು. ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಸೂಕ್ತ ಭದ್ರತೆ ಕಲ್ಪಿಸಿ, ಶಿಷ್ಟಾಚಾರ ಕಲ್ಪಿಸುವಂತೆ ಎಸ್‌ಪಿಜಿ ಅಧಿಕಾರಿ ಅಂಬರೀಷ್‌ ಉಪಾದ್ಯಾಯ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಪುನಃ ಮದ್ಯಾಹ್ನ 1.35 ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಹುಬ್ಬಳ್ಳಿಗೆ ತೆರಳುವರು. ಈ ಸಂದರ್ಭದಲ್ಲಿ ಅಗತ್ಯ ಭದ್ರತೆ ಒದಗಿಸುವುದು ಸ್ಥಳೀಯ ಪೊಲೀಸ್‌ ಇಲಾಖೆಯ ಜವಬ್ದಾರಿಯಾಗಿರುತ್ತದೆ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಧಾನಮಂತ್ರಿಗಳನ್ನು ಸ್ವಾಗತಿಸಲು ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಕೇಂದ್ರ ಮಂತ್ರಿಗಳು ಆಗಮಿಸುವರು. ಇವರಿಗೆ ಶಿಷ್ಟಾಚಾರ ಪಾಲನೆಯಾಗಬೇಕು. ಹತ್ತಿರದಲ್ಲಿ ವ್ಯವಸ್ಥಿತ ಆಸ್ಪತ್ರೆ ಗುರುತಿಸಿಕೊಂಡಿರಬೇಕು. 

5, 8ನೇ ಕ್ಲಾಸ್‌ ಬೋರ್ಡ್‌ ಪರೀಕ್ಷೆಯಲ್ಲಿ ಎಲ್ರೂ ಪಾಸ್‌: ಹೈಕೋರ್ಟ್‌ನಲ್ಲಿ ಸರ್ಕಾರ ವಾದ

3 ಅಂಬುಲೆನ್ಸ್‌ ಸೇವೆ ಒದಗಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ಅನಿವಾರ್ಯ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ರಸ್ತೆ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸುವ ಸಂದರ್ಭ ಉಂಟಾದರೆ ಈ ನಿಟ್ಟಿನಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಏರ್‌ಪೋರ್ಚ್‌ ಅಥಾರಿಟಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.