ಕರ್ನಾಟಕದಲ್ಲಿ ಕುಡಿವ ನೀರು ಸಮಸ್ಯೆ ನೀಗಿಸಲು 5.14 ಕೋಟಿ
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ರೂಪುರೇಷೆ ವರದಿ ಸಿದ್ಧಪಡಿಸಲಾಗಿತ್ತು. ಈ ವರದಿಯ ಶಿಫಾರಸು ಅನ್ವಯ ಮುನ್ನೆಚ್ಚರಿಕೆ ಕ್ರಮಗಳಿಗಾಗಿ 5.14 ಕೋಟಿ ರು. ಬಿಡುಗಡೆ ಮಾಡಲಾಗಿದೆ.
ಬೆಂಗಳೂರು(ಜು.24): ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಭಾವದಿಂದ ಬರದ ಸ್ಥಿತಿ ಆವರಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯು 5.14 ಕೋಟಿ ರು. ಹಣ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ರೂಪುರೇಷೆ ವರದಿ ಸಿದ್ಧಪಡಿಸಲಾಗಿತ್ತು. ಈ ವರದಿಯ ಶಿಫಾರಸು ಅನ್ವಯ ಮುನ್ನೆಚ್ಚರಿಕೆ ಕ್ರಮಗಳಿಗಾಗಿ 5.14 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮೊದಲು ಬಿಡುಗಡೆ ಮಾಡಿದ್ದ ಒಂದು ಕೋಟಿ ರು. ಸೇರಿ ಈವರೆಗೆ 6.14 ಕೋಟಿ ರು. ಬಿಡುಗಡೆ ಮಾಡಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕುಡಿಯುವ ನೀರಿಗಾಗಿ ಕೇಳಿದಷ್ಟು ಹಣ ಕೊಟ್ಟ ಸರ್ಕಾರ: ತಾತ್ಕಾಲಿಕ ವ್ಯವಸ್ಥೆಗೆ 6 ಕೋಟಿ ರೂ. ಬಿಡುಗಡೆ
ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಯಿದೆ. ಹೀಗಾಗಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿ 2 ಸಭೆಗಳನ್ನು ನಡೆಸಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವರದಿ ಸಿದ್ಧಪಡಿಸಿತ್ತು.
ಇದೀಗ ಆ ವರದಿ ಪ್ರಕಾರ ಜಿಲ್ಲಾವಾರು ಎಷ್ಟುತಾಲೂಕುಗಳಲ್ಲಿ ಮಳೆಯಾಗಿದೆ? ಎಷ್ಟುತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ? ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ವೆಲ… ಮೂಲಕ ಒದಗಿಸಬೇಕು ಎಂಬುದನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ಧಪಡಿಸಿ ಹಣ ಬಿಡುಗಡೆ ಮಾಡಲಾಗಿದೆ.
514 ಹಳ್ಳಿಗಳಿಗೆ ಟ್ಯಾಂಕರ್ ನೀರು:
ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಯ 514 ಹಳ್ಳಿಗಳಿಗೆ 254 ಟ್ಯಾಂಕರ್ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ಗಳಲ್ಲಿ ಪ್ರತಿ ದಿನ 703 ಟ್ರಿಪ್ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುವುದು. ಜತೆಗೆ 465 ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ಕುಡಿಯುವ ನೀರು ಸರಬರಾಜು ಮಾಡಲೂ ಹಣ ಒದಗಿಸಿರುವುದಾಗಿ ತಿಳಿದುಬಂದಿದೆ.