ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದ್ದು, ಸಾರ್ವಜನಿಕರು ಲಂಚ ನೀಡುವುದು ಸಾಮಾನ್ಯವಾಗಿದೆ. ಸಿಬಿಐನಲ್ಲಿ ಸಾವಿರಾರು ಭ್ರಷ್ಟಾಚಾರ ಪ್ರಕರಣಗಳು ಬಾಕಿ ಇವೆ. ನ್ಯಾಯಾಂಗ ವ್ಯವಸ್ಥೆ ಕೂಡ ಭ್ರಷ್ಟರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ.

 ಬೆಂಗಳೂರು (ಸೆ.10) ನಮ್ಮ ರಾಜ್ಯ ಎಷ್ಟೇ ಅಭಿವೃದ್ಧಿ ಆಗಿದೆ ಎಂದು ನಾವು ಹೇಳಿಕೊಂಡರೂ, 100ಕ್ಕೆ 63ರಷ್ಟು ಜನ ಸರ್ಕಾರಿ ಕಚೇರಿ ಕೆಲಸ ಮಾಡಿಸಿಕೊಳ್ಳಲು ಲಂಚ ಕೊಡುತ್ತಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವೇ? ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಸಿ.ಎಚ್ ಜಾಧವ್, ರಾಜಶೇಖರ್ ಟಿ.ಬಿ ಹಾಗೂ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ರಶ್ಮಿ ಜಾಧವ್ ಬರೆದಿರುವ ‘ಲಾ ರಿಲೇಟಿಂಗ್ ಟು ಕರಪ್ಷನ್ ಆ್ಯಂಡ್ ಪೊಸೆಷನ್‌ ಆಫ್ ಡಿಸ್‌ಪ್ರೊಪೋರ್ಷನೇಟ್ ಅಸ್ಸೆಟ್ಸ್’ 2ನೇ ಆವೃತ್ತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜನ ಸಾಮಾನ್ಯರನ್ನು ಕಿತ್ತು ತಿನ್ನುವ, ಲೂಟಿ ಹೊಡೆಯುವ ಸಂಘಟಿತ ಭ್ರಷ್ಟಾಚಾರವನ್ನು ಇಡೀ ವ್ಯವಸ್ಥೆಯಾಗಿ ನಾವು ತಡೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಅಪಾಯ ಎಂದರು.

ಸಿಬಿಐನಲ್ಲಿ 7,072 ಭ್ರಷ್ಟಾಚಾರ ಪ್ರಕರಣಗಳು ಬಾಕಿ ಉಳಿದಿವೆ. ಅದರಲ್ಲಿ 5,500ಕ್ಕೂ ಹೆಚ್ಚು ಪ್ರಕರಣಗಳು 10ರಿಂದ 20 ವರ್ಷಗಳಿಂದ ಬಾಕಿ ಉಳಿದುಕೊಂಡಿವೆ. ಈ ಪ್ರಮಾಣದಲ್ಲಿ ಪ್ರಕರಣಗಳು ಬಾಕಿ ಉಳಿದರೆ ಯಾರಿಗೇ ತಾನೇ ಕಾನೂನಿನ ಬಗ್ಗೆ ಭಯ ಇರುತ್ತದೆ? ಇನ್ನು ನ್ಯಾಯಾಂಗ ವ್ಯವಸ್ಥೆ ಕೂಡ ಭ್ರಷ್ಟರಿಗೆ ಕಾನೂನಿನ ಭಯ ಸೃಷ್ಟಿಸುವಲ್ಲಿ ವಿಫಲವಾಗಿದೆ. ಇಂದಿನ ದಿನಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ, ಇಡೀ ವ್ಯವಸ್ಥೆಯಾಗಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.