ಲಾಕ್ಡೌನ್ ಬಗ್ಗೆ ಚಿಂತನ ಮಂಥನ: ಕರ್ನಾಟಕದಲ್ಲಿ ಮತ್ತೆ ಹೆಚ್ಚಾದ ಕೊರೋನಾ...!
ಮೇ.3 ನಂತರ ಲಾಕ್ಡೌನ್ ವಿಸ್ತರಣೆ ಮಾಡಬೇಕೋ ಇಲ್ಲ ಮತ್ತೆ ವಿಸ್ತರಣೆ ಮಾಡ್ಬೇಕೋ ಎನ್ನುವ ಚಿಂತನೆಗಳು ನಡೆದಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಬೆಂಗಳೂರು, (ಏ.27): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಬಿಎಸ್ ಯಡಿಯೂರಪ್ಪ ಅವರ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಈ ವೇಳೆ ರಾಜ್ಯದ ಸ್ಥಿತಿಗತಿ ಬಗ್ಗೆ ತಿಳಿದುಕೊಂಡಿದ್ದು, ಲಾಕ್ಡೌನ್ ಬಗ್ಗೆ ಚರ್ಚೆ ನಡೆಸಿದರು.
ಮತ್ತೊಂದೆಡೆ ರಾಜ್ಯದಲ್ಲಿ ಮತ್ತೆ ಇಂದು (ಸೋಮವಾರ) 8 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ಇನ್ನು ಇದುವರೆಗೆ ಒಟ್ಟು 188 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈತ ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ತಿಳಿದುಬಂದಿದೆ.
ಎಣ್ಣೆ ಪ್ರಿಯರಿಗೆ ಮತ್ತೆ ನಿರಾಸೆ: ಮೇ. 15ವರೆಗೆ ಮದ್ಯ ಸಿಗಲ್ಲ!
ಜೊತೆಗೆ, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯ ಜಮಖಂಡಿಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.
ಮುಂಬೈಗೆ ಪ್ರಯಾಣ ಬೆಳೆಸಿದ್ದ ಇತಿಹಾಸ ಹೊಂದಿದ್ದ ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ, 432 ವರ್ಷದ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಮತ್ತು 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
ಬಾಗಲಕೋಟೆಯ ಜಮಖಂಡಿಯಲ್ಲಿ 32 ಮತ್ತು 21 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರದ 45 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ.
ಈ ನಡುವೆ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಬೆಂಗಳೂರು ನಿವಾಸಿ ಸೋಮವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ನಲ್ಲಿ ಸ್ಪಷ್ಟಪಡಿಸಿದೆ.