ಪ್ರತ್ಯೇಕ ಅಪಘಾತ 9 ಜನರು ದುರ್ಮರಣ! ಹನುಮ ಜಯಂತಿ ಡಿಜೆ ನೋಡಲು ಹೋಗಿದ್ದ ಬಾಲಕರು ಮಸಣಕ್ಕೆ!

Synopsis
ಬಾಗಲಕೋಟೆ ತಾಲೂಕಿನಲ್ಲಿ ಕ್ಯಾಂಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಬಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹನುಮ ಜಯಂತಿ ಆಚರಣೆ ವೀಕ್ಷಿಸಲು ಹೊರಟಿದ್ದ ಬಾಲಕರು ಈ ದುರಂತಕ್ಕೆ ಸಿಲುಕಿದ್ದಾರೆ. ಹಾವೇರಿಯಲ್ಲಿ ಇದೇ ರೀತಿಯ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಬಾಗಲಕೋಟೆ (ಮೇ.8): ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್ನ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯಲ್ಲಿ ಗದ್ದನಕೇರಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಮೃತ ಬಾಲಕರನ್ನು ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಮತ್ತು ಕಾಮಣ್ಣ ಕುಪಲಿ (16) ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಆಚರಣೆಗಾಗಿ ಗ್ರಾಮದಲ್ಲಿ ಡಿಜೆ ಮೆರವಣಿಗೆ ಆಯೋಜಿಸಲಾಗಿತ್ತು. ಈ ಮೆರವಣಿಗೆಯನ್ನು ವೀಕ್ಷಿಸಲು ಹೊರಟಿದ್ದ ಬಾಲಕರು ಈ ದುರಂತಕ್ಕೆ ಸಿಲುಕಿದ್ದಾರೆ. ಸದ್ಯ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಅಪಘಾತ
ಹಾವೇರಿಯಲ್ಲಿ ಮತ್ತೊಂದು ಭೀಕರ ಅಪಘಾತ – ಆರು ಮಂದಿ ಸಾವು
ಹಾವೇರಿ: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಹಾವೇರಿ ಜಿಲ್ಲೆಯ ಮೋಟೆಬೆನ್ನೂರು ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಣೆಬೆನ್ನೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಆಡಿ ಕಾರು, ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ದುರ್ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.