ಹಾಸನ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಂಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಪ್ರೀತಂ ಗೌಡ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಸನ ಮೂಲದ, ಅಂಧತ್ವ ಹೊಂದಿರುವ ಮಹೇಂದ್ರ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

ಬೆಂಗಳೂರು (ನ.28) :  ಹಾಸನ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಂಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಪ್ರೀತಂ ಗೌಡ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಸನ ಮೂಲದ, ಅಂಧತ್ವ ಹೊಂದಿರುವ ಮಹೇಂದ್ರ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಜನತಾ ದರ್ಶನದಲ್ಲಿ ಹಾಸನ ಮೂಲದ ಮಹೇಂದ್ರ ಮಾತನಾಡಿ, ತಮ್ಮ ಪತ್ನಿ ಜಯಕಿರಣ ಎಂಬುವವರು ಹಾಸನ ಜಿಲ್ಲೆಯ ಮಕ್ಕಳ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯನ್ನು ಪತ್ತೆ ಮಾಡಿ, ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಕಳಪೆ ಆಹಾರ ಪೂರೈಕೆ ಮಾಡುತ್ತಿರುವವರು ಹಿಂದಿನ ಶಾಸಕ ಪ್ರೀತಂ ಗೌಡ ಅವರ ಬೆಂಬಲಿಗರಾಗಿದ್ದರು. ಹೀಗಾಗಿ ಬಿ.ವೈ. ವಿಜಯೇಂದ್ರ ಮತ್ತು ಪ್ರೀತಂ ಗೌಡ ನನ್ನ ಪತ್ನಿಗೆ ಕಿರುಕುಳ ನೀಡಿದ್ದಲ್ಲದೆ, ಆಕೆ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

6 ತಿಂಗಳಿಂದ ಸರ್ಕಾರ ಮಲಗಿತ್ತು ಎಂಬ ಆರೋಪ; ವಿಪಕ್ಷ ನಾಯಕ ಆರ್‌.ಅಶೋಕ್ ವಿರುದ್ಧ ಸಿಎಂ ಗರಂ!

ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಎಲ್ಲ ವಿವರಗಳನ್ನೂ ಕೊಡು ತನಿಖೆ ಮಾಡಿಸುತ್ತೇನೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇನೆ. ಹಾಗೆಯೇ, ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಭರವಸೆ ನೀಡಿದರು. ಜತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ನೀಡಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; ಊಟದ ಸಮಯದಲ್ಲೂ ಅಹವಾಲು ಆಲಿಸಿದ ಸಿಎಂ!

ಈ ಕುರಿತು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಹಾಸನ ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಗೆ ಪ್ರಕರಣದ ವಿವರ ನೀಡಿ, ತನಿಖೆ ನಡೆಸುವಂತೆ ಮೂರು ವರ್ಷಗಳ ಹಿಂದೆಯೇ ಕೋರಿದ್ದೇನೆ. ಆದರೆ, ಈವರೆಗೆ ತನಿಖೆ ನಡೆಸಿಲ್ಲ. ಅದರ ಬಗ್ಗೆ ನನ್ನ ಪತ್ನಿಯನ್ನು ವರ್ಗಾವಣೆ ಮಾಡಿ ಹಿಂಸಿಸಲಾಗಿದೆ. ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು ಹಾಗೂ ಕಳಪೆ ಆಹಾರ ಪೂರೈಕೆ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.