ಬೆಂಗಳೂರಿನ ಮತದಾರರ ಪಟ್ಟಿಯಿಂದ ತಮ್ಮ ಹೆಸರು ರದ್ದಾಗಿರುವುದಾಗಿ ನಟ ಪ್ರಕಾಶ್ ರಾಜ್ ವಿಡಿಯೋ ಮೂಲಕ ತಿಳಿಸಿದ್ದಾರೆ. ತಾವು ಸ್ಪರ್ಧಿಸಿದ್ದ ಕ್ಷೇತ್ರದಲ್ಲೇ ಮತದ ಹಕ್ಕನ್ನು ಕಳೆದುಕೊಂಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್ಐಆರ್ ನೆಪದಲ್ಲಿ ಲಕ್ಷಾಂತರ ಮತಗಳನ್ನು ಅಳಿಸಿಹಾಕಿರುವುದು ಪ್ರಜಾಪ್ರಭುತ್ವದ ಹಕ್ಕನ್ನು ಕಸಿದಂತೆ ಎಂದು ಅವರು ಚುನಾವಣಾ ಆಯೋಗದ ಕ್ರಮವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರು (ಆ.11): ನಟ ಪ್ರಕಾಶ್ ರಾಜ್ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಬೆಂಗಳೂರಿನಲ್ಲಿ ರದ್ದಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸ್ವತಃ ನಟ ಪ್ರಕಾಶ್ ರಾಜ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಚುನಾವಣಾ ಆಯೋಗದ ನಡೆಗೆ ತೀವ್ರ ಆಕ್ರೋಶ ಹಾಗೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಎಸ್ಐಆರ್ (SIR) ನೆಪದಲ್ಲಿ ಸುಮಾರು 65 ಲಕ್ಷ ಜನರ ಮತಗಳನ್ನು ಡಿಲೀಟ್ ಮಾಡಲಾಗಿದೆ. ಈ ರೀತಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ದುರದೃಷ್ಟಕರ ಮತದಾರರಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ ಎಂದು ಪ್ರಕಾಶ್ ರಾಜ್ ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸ್ಪರ್ಧಿಸಿದ್ದ ಕ್ಷೇತ್ರದಲ್ಲೇ ಮತವಿಲ್ಲ!
ವಿಡಿಯೋದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್, 'ನಾನು ಹುಟ್ಟಿ, ಬೆಳೆದ ಕ್ಷೇತ್ರದಿಂದಲೇ ನನ್ನ ಮತವನ್ನು ತೆಗೆದುಹಾಕಲಾಗಿದೆ. ನಾನು ಇಲ್ಲೇ ಶಾಲಾ-ಕಾಲೇಜುಗಳನ್ನು ಈದಿದ್ದೇನೆ, ನಟನಾ ಶಾಲೆಗಳಿಗೆ ಹೋಗಿದ್ದೇನೆ. ಸಿನಿಮಾ ಆರಂಭಿಕ ಜೀವನ ಕಳೆದಿದ್ದೇನೆ. ಜೊತೆಗೆ ಇದೇ ಕ್ಷೇತ್ರದಿಂದ ನಾನು ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಆದರೂ ಸಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಲಾಗಿದೆ. ಇದು ಜೋಕ್ ಅಲ್ಲದೆ ಮತ್ತೇನು?' ಎಂದು ಪ್ರಶ್ನಿಸಿದ್ದಾರೆ.
ಸಾರ್ವಜನಿಕರ ಹಕ್ಕುಗಳನ್ನು ಕಸಿಯುವ ರೀತಿಯಲ್ಲಿ ಈ ರೀತಿ ಏಕಾಏಕಿ ಲಕ್ಷಾಂತರ ಮತಗಳನ್ನು ಡಿಲೀಟ್ ಮಾಡಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಇಂತಹ ಗಂಭೀರ ತಪ್ಪುಗಳು ಹೇಗೆ ಸಾಧ್ಯ ಎಂದು ನಟ ಪ್ರಕಾಶ್ ರಾಜ್ ವಿಡಿಯೋ ಮೂಲಕ ಚುನಾವಣಾ ಆಯೋಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತಾರಟೆಗೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ಪ್ರಕಾಶ್ ರಾಜ್ ಅಭಿಯಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.


