ಚಿತ್ರನಟಿ ಉಮಾಶ್ರೀ ಅವರ ಯಕ್ಷಗಾನ ಪ್ರವೇಶವು ಪ್ರಶಂಸೆ ಮತ್ತು ಟೀಕೆ ಎರಡನ್ನೂ ಗಳಿಸಿದೆ. ಕೆಲವರು ಅವರ ಪ್ರಯತ್ನವನ್ನು ಶ್ಲಾಘಿಸಿದರೆ, ಇನ್ನು ಕೆಲವರು ಯಕ್ಷಗಾನದ ಪವಿತ್ರತೆಯನ್ನು ಪ್ರಶ್ನಿಸಿದ್ದಾರೆ. ಈ ಘಟನೆಯು ಕಲಾ ಪ್ರಕಾರಗಳಲ್ಲಿ ಹೊರಗಿನವರ ಭಾಗವಹಿಸುವಿಕೆಯ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಕಾರವಾರ ಜ.20): ಚಿತ್ರನಟಿ ಉಮಾಶ್ರೀ ಯಕ್ಷಗಾನ ವೇಷದ ಬಗ್ಗೆ ಚಲನಚಿತ್ರ ಪ್ರೇಮಿಗಳು ಹಾಗೂ ಜನರಿಂದ ಪ್ರಶಂಸೆ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಕಲಾವಿದರು ಹಾಗೂ ಅಪ್ಪಟ ಯಕ್ಷಗಾನ ಪ್ರಿಯರಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

Add Asianetnews Kannada as a Preferred SourcegooglePreferred

ಉಮಾಶ್ರೀ ಈಚೆಗೆ ಹೊನ್ನಾವರದಲ್ಲಿ ಪಟ್ಟಾಭಿಷೇಕ ಪ್ರಸಂಗದಲ್ಲಿ ನಿರ್ವಹಿಸಿದ ಮಂಥರೆಯ ಪಾತ್ರ ಚರ್ಚೆಗೆ ಗ್ರಾಸವಾಗಿದೆ.

ಚಿತ್ರರಂಗ ಹಾಗೂ ನಾಟಕದಲ್ಲಿ ಉಮಾಶ್ರೀ ಅವರ ಕಲೆಯ ಬಗ್ಗೆ ಎಲ್ಲರೂ ಗೌರವ ವ್ಯಕ್ತಪಡಿಸಿದ್ದಾರೆ. ಆದರೆ, ಯಕ್ಷಗಾನದಲ್ಲಿ ಅವರನ್ನು ಕರೆತಂದು ಪಾತ್ರ ಮಾಡಿಸಬೇಕಿತ್ತೇ? ಎಂದು ಪ್ರಶ್ನಿಸಿದ್ದಾರೆ. ಜತೆಗೆ ಮುಂದೆ ನೀಲಿ ಚಿತ್ರತಾರೆ ಸನ್ನಿ ಲಿಯೋನ್ ಸರದಿ ಎಂದು ಒಬ್ಬರು ಕುಟುಕಿದ್ದಾರೆ.

ಇದನ್ನೂ ಓದಿ: ಅನಾರೋಗ್ಯ ನಡುವೆಯೂ 'ವೀರ ಚಂದ್ರಹಾಸ'ನಾಗಿ ಬರಲು ಸಜ್ಜಾಗಿದ್ದಾರೆ ಶಿವಣ್ಣ! ಚಿತ್ರದ ಪೋಸ್ಟರ್ ವೈರಲ್

ಯಾವುದೇ ಶಾಸ್ತ್ರೀಯ ಕಲೆಗಳಲ್ಲಿ ಒಂದು ಹಂತದ ತರಬೇತಿ ಆಗದೆ ಗೆಜ್ಜೆ ಕಟ್ಟುವುದಿಲ್ಲ. ಸಹಕಲಾವಿದರ, ಸಂಘಟಕರ ಸಮ್ಮತಿಯೂ ಅದಕ್ಕೆ ಸಿಗದು. ಆದರೆ, ಯಕ್ಷಗಾನದಲ್ಲಿ ಎಲ್ಲವೂ ಸಾಧ್ಯ. ಉಮಾಶ್ರೀ ಅವರ ಪಾತ್ರ ರಂಜನೆಗಾಗಿ ಒಂದು ಸಲದ ಪ್ರಯೋಗಕ್ಕೆ ಮಾತ್ರ ಸೀಮಿತವಾಗಿರಲಿ ಎಂದು ಆಶಿಸೋಣ. ಯಕ್ಷಗಾನದ ಬಾಲಪಾಠವೂ ಆಗದ ಸಿನಿಮಾದವರನ್ನು, ಯಕ್ಷಗಾನೇತರ ಕಲಾವಿದರನ್ನು ಕರೆತಂದು ಯಕ್ಷಗಾನದಲ್ಲಿ ಪಾತ್ರ ಮಾಡಿಸುವ ಹೊಸ ಪರಂಪರೆ ಸೃಷ್ಟಿ ಆಗದಿರಲಿ ಎಂದು ಕರ್ಕಿ ಹಾಸ್ಯಗಾರ ಮನೆತನದ ಆನಂದ ಹಾಸ್ಯಗಾರ ಅಭಿಪ್ರಾಯಪಟ್ಟಿದ್ದಾರೆ.

ಕೆರೆಮನೆ ಶಿವಾನಂದ ಹೆಗಡೆ, ಉಮಾಶ್ರೀ ಬಗ್ಗೆ ಗೌರವ ಇದೆ. ಆದರೆ ಸಿನಿಮಾ ಇಮೇಜೇ ಮುಖ್ಯವಾಗಿ ಆ ದಿನದ ಯಾವ ಕಲಾವಿದರ ಬಗ್ಗೆ ಚಕಾರ ಎತ್ತಿಲ್ಲ. ಪಟ್ಟಾಭಿಷೇಕದಂತಹ ಪ್ರಸಂಗದಲ್ಲಿ ಮಂಥರೆಯೇ ಕೇಂದ್ರವಾಗಿ ಬದಲಾದಂತೆ ಕಾಣುತ್ತದೆ. ಅನ್ಯ ಪ್ರಕಾರದ ಕಲಾವಿದರನ್ನು ನಮ್ಮ ರಂಗಭೂಮಿಗೆ ತರುವ ಸರಿಯಾದ ಕ್ರಮ ಇದಲ್ಲ. ಒಂದೇ ಒಂದು ಯಕ್ಷಗಾನದ ವೇಷಭೂಷಣ ಕೂಡ ತೊಡಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಉಮಾಶ್ರೀಯಂತಹ ಹಿರಿಯ ನಟರನ್ನು ಆಟಕ್ಕೆ ಕರೆಯುವ ಹಿಂದಿನ ಉದ್ದೇಶ ಗಲ್ಲಾಪೆಟ್ಟಿಗೆಯ ಕಲೆಕ್ಷನ್. ಇದು ಅಪಾಯಕಾರಿ. ಹಣ ಮಾಡುವ ಏಕೈಕ ಧೋರಣೆಯ ಕೆಲ ಸಂಘಟಕರು ದಾವೂದ್ ಇಬ್ರಾಹಿಂನನ್ನು ಕರೆಸಿ ಭಸ್ಮಾಸುರನ ವೇಷ ಮಾಡಿಸುತ್ತಾರೆ ಎಂದು ಗೋಪಾಲಕೃಷ್ಣ ಭಾಗವತ್ ಕುಟುಕಿದ್ದಾರೆ.

ಯಕ್ಷಗಾನಕ್ಕೂ ಸೈ ಎಂದ ಉಮಾಶ್ರೀ, ಪುಟ್ಮಲ್ಲಿ ಅಭಿನಯಕ್ಕೆ ಜೈ ಎಂದ ಪ್ರೇಕ್ಷಕರು!

ಮಹಾಬಲೇಶ್ವರ ಎಸ್. ಭಟ್, ಉಮಾಶ್ರೀ ಮನರಂಜನೆ ನೀಡಿದ್ದಂತೂ ನಿಜ. ಯಕ್ಷಗಾನಕ್ಕಿರುವ ಅದರದ್ದೇ ಆದ ಶೈಲಿ ಮಾತ್ರ ಪಾತ್ರದಲ್ಲಿ ತುಂಬಿಲ್ಲ. ನಾಟಕದ ಪಾತ್ರದಂತೆ ಮೂಡಿಬಂದಿದೆ ಎಂದಿದ್ದಾರೆ.

ಒಟ್ಟಿನಲ್ಲಿ ಉಮಾಶ್ರೀ ಯಕ್ಷಗಾನ ಪಾತ್ರ ಚಿತ್ರನಟಿ ಎನ್ನುವ ಹಿನ್ನೆಲೆಯಲ್ಲಿ ರಂಜನೆ ನೀಡಿರಬಹುದು. ಆದರೆ ಯಕ್ಷಗಾನೀಯವಾಗಿ ಮೂಡಿಬಂದಿಲ್ಲ. ನಾಟಕೀಯತೆ ತುಂಬಿತ್ತು. ಯಕ್ಷಗಾನಕ್ಕೆ ಇಂತಹ ಗಿಮಿಕ್‌ಗಳು ಬೇಕಾಗಿರಲಿಲ್ಲ ಎನ್ನುವುದು ಯಕ್ಷಗಾನದ ಅಪ್ಪಟ ಅಭಿಮಾನಿಗಳು, ಕಲಾವಿದರ ಅಂಬೋಣವಾಗಿದೆ.



ಈ ಸೋಷಿಯಲ್ ಮಾಡಿರುವ ಕೆಲವು ಕಮೆಂಟ್ಸ್ ಡಿಲೀಟ್ ಆಗುವ ಮುನ್ಸೂಚನೆಯಿಂದ ಕೆಲವು ಸ್ಕ್ರೀನ್ ಶಾಟ್‌ಗಳನ್ನು ಇಲ್ಲಿ ಶೇರ್ ಮಾಡಲಾಗಿದೆ.