ಬಿಜೆಪಿ ಕಾಲದ ಬಿಟ್ಕಾಯಿನ್ ಹಗರಣ ಮತ್ತೆ ಸಿಐಡಿ ತನಿಖೆಗೆ?
ಬಿಟ್ ಕಾಯಿನ್ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿದೆ. ಹ್ಯಾಕರ್ ಶ್ರೀಕಿಯನ್ನು ಬಳಸಿಕೊಂಡು ಆಡಳಿತ ಪಕ್ಷದವರು ದೊಡ್ಡ ಮೊತ್ತದ ಹಣ ಲಪಟಾಯಿಸಿದ್ದಾರೆ ಎಂದು ಆಗಿನ ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಸಿದ್ದರು. ಅಲ್ಲದೆ ತಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುವುದಾಗಿ ಸಹ ಕಾಂಗ್ರೆಸ್ ಪಕ್ಷ ಹೇಳಿತ್ತು.
ಬೆಂಗಳೂರು(ಜೂ.27): ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಅಪರಾಧ ತನಿಖಾ ದಳ(ಸಿಐಡಿ)ದಿಂದ ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ಈ ಸಂಬಂಧ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಇದರ ಮೊದಲ ಹಂತವಾಗಿ ಬಿಟ್ ಕಾಯಿನ್ ಪ್ರಕರಣ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತನ್ಮೂಲಕ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದ್ದ ಬಿಟ್ ಕಾಯಿನ್ ಹಗರಣಕ್ಕೆ ಅಧಿಕೃತವಾಗಿ ಮರುಜೀವ ಬಂದಂತಾಗಿದೆ.
ಬಿಟ್ ಕಾಯಿನ್ ಹಗರಣ ಮರು ತನಿಖೆ: ಸಚಿವ ಪರಮೇಶ್ವರ್
ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್ ಶ್ರೀಕಾಂತ್ ಅಲಿಯಾಸ್ ಶ್ರೀಕಿಯನ್ನು ಸಿಸಿಬಿ ಬಂಧಿಸಿತ್ತು. ಆಗ ವಿಚಾರಣೆ ವೇಳೆ ಆತನ ಬಿಟ್ ಕಾಯಿನ್ ದಂಧೆ ಬಯಲಾಗಿತ್ತು. ಈ ಬಗ್ಗೆ ಕಾಟನ್ಪೇಟೆ ಠಾಣೆಯಲ್ಲಿ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ ಸಿಸಿಬಿ, ಶ್ರೀಕಿ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಹ ಸಲ್ಲಿಸಿತು. ಇನ್ನೊಂದೆಡೆ ಇ ಪ್ರೊಕ್ಯುರ್ಮೆಂಟ್ ವೆಬ್ಸೈಟ್ ಹ್ಯಾಕ್ ಪ್ರಕರಣ ಸಂಬಂಧ ಶ್ರೀಕಿ ವಿರುದ್ಧ ಸಿಐಡಿ ಕೂಡ ಪ್ರತ್ಯೇಕ ತನಿಖೆ ನಡೆಸಿತ್ತು. ಆದರೆ ಬಿಟ್ ಕಾಯಿನ್ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿದೆ. ಹ್ಯಾಕರ್ ಶ್ರೀಕಿಯನ್ನು ಬಳಸಿಕೊಂಡು ಆಡಳಿತ ಪಕ್ಷದವರು ದೊಡ್ಡ ಮೊತ್ತದ ಹಣ ಲಪಟಾಯಿಸಿದ್ದಾರೆ ಎಂದು ಆಗಿನ ಕಾಂಗ್ರೆಸ್ ಪಕ್ಷದ ನಾಯಕರು ಆರೋಪಿಸಿದ್ದರು. ಅಲ್ಲದೆ ತಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುವುದಾಗಿ ಸಹ ಕಾಂಗ್ರೆಸ್ ಪಕ್ಷ ಹೇಳಿತ್ತು.
ಎಸ್ಐ, ಬಿಟ್ಕಾಯಿನ್ ಅಕ್ರಮಕ್ಕೆ ತಾರ್ಕಿಕ ಅಂತ್ಯ, ಇದು ನಮ್ಮ 6ನೇ ಗ್ಯಾರಂಟಿ: ಪ್ರಿಯಾಂಕ್ ಖರ್ಗೆ
ಈ ಬಗ್ಗೆ ಮರು ತನಿಖೆ ನಡೆಸುವುದಾಗಿ ಅಧಿಕೃತವಾಗಿ ಇತ್ತೀಚೆಗೆ ರಾಜ್ಯ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಎರಡು ದಿನಗಳ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಪತ್ರ ಬರೆದಿದ್ದಾರೆ. ಆಯುಕ್ತರ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಡಿಜಿಪಿ ರವಾನಿಸಿದ್ದು, ಈಗ ಮುಖ್ಯಮಂತ್ರಿಗಳ ಅಂಗಳದಲ್ಲಿ ಬಿಟನ್ ಪ್ರಕರಣದ ಚೆಂಡು ಬಿದ್ದಿದೆ.
ಏನಿದು ಪ್ರಕರಣ?:
2020ರಲ್ಲಿ ಕೆಂಪೇಗೌಡ ನಗರ ಸಮೀಪ ಡ್ರಗ್್ಸ ಮಾರಾಟಕ್ಕೆ ಯತ್ನಿಸಿದ್ದಾಗ ಶ್ರೀಕಿ ಹಾಗೂ ಆತನ ಸ್ನೇಹಿತರು ಸಿಸಿಬಿ ಬಲೆಗೆ ಬಿದ್ದಿದ್ದರು. ಬಳಿಕ ವಿಚಾರಣೆ ವೇಳೆ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಗೇಮಿಂಗ್ ಕಂಪನಿಗಳು ಹಾಗೂ ಸರ್ಕಾರದ ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿ ಸುಮಾರು 11 ಕೋಟಿ ರು. ಹಣವನ್ನು ಶ್ರೀಕಿ ದೋಚಿದ್ದ ಸಂಗತಿ ಬಯಲಾಗಿತ್ತು. ಹೀಗೆ ದೋಚಿದ್ದ ಹಣವನ್ನು ಬಿಟ್ ಕಾಯಿನ್ಗಳಾಗಿ ಪರಿವರ್ತಿಸಿ ಡ್ರಗ್್ಸ ದಂಧೆಗೆ ಶ್ರೀಕಿ ಬಳಸಿದ್ದ ಎನ್ನಲಾಗಿತ್ತು.