ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ.

ಕೊಳ್ಳೇಗಾಲ (ಡಿ.04): ಅರಣ್ಯ ಕ್ಷೀಣಿಸುತ್ತಿದ್ದು, ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಸಮಗ್ರ ಕಮಾಂಡ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಗಸ್ತು ಹೆಚ್ಚಳದ ಮೂಲಕ ಹಾಗೂ ಅರಣ್ಯದಂಚಿನ ಜನರಲ್ಲಿ ಸಹಬಾಳ್ವೆಯ ಬಗ್ಗೆ ಅರಿವು ಮೂಡಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ಕಮಾಂಡ್ ಕೇಂದ್ರ ಒಂದು ಯಶಸ್ವಿ ಪರಿಹಾರ ಆಗಲಿದೆ ಎಂದರು.

Add Asianetnews Kannada as a Preferred SourcegooglePreferred

ಪ್ರಸ್ತುತ ನಾಗರಹೊಳೆ, ಎಂ.ಎಂ.ಹಿಲ್ಸ್, ಕಾಳಿ, ಮಡಿಕೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಕಮಾಂಡ್ ಕೇಂದ್ರ ಸಿದ್ಧವಾಗಿದ್ದು ಸಿಬ್ಬಂದಿಗೆ ತರಬೇತಿಯನ್ನೂ ನೀಡಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಿರುವ ಚಿಕ್ಕಮಗಳೂರು ವಿಭಾಗ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಹಾಗೂ ಹಾಸನ ವಲಯದಲ್ಲಿ ಕಮಾಂಡ್ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ರಾಜ್ಯಮಟ್ಟದ ಕೇಂದ್ರ ಸಿದ್ಧವಾಗುತ್ತಿದ್ದು, ಅಧಿವೇಶನದ ನಂತರ ಇದನ್ನು ಉದ್ಘಾಟಿಸಲಾಗುವುದು ಎಂದು ತಿಳಿಸಿದರು.

ಕ್ರಮ ಕೈಗೊಳ್ಳಿ

ಕೃತಕ ಬುದ್ಧಿಮತ್ತೆಯ (ಎ.ಐ) ಕ್ಯಾಮರಾ, ಥರ್ಮಲ್ ಡ್ರೋನ್ ಕ್ಯಾಮರಾ ಇತ್ಯಾದಿಗಳನ್ನು ಬಳಸಿ ವನ್ಯಜೀವಿಗಳ ಚಲನ ವಲನದ ಬಗ್ಗೆ ನಿಗಾ ಇಟ್ಟು, ಯಾವ ಕಾಡಿನಂಚಿನ ಗ್ರಾಮದ ಬಳಿ ವನ್ಯಜೀವಿ ಇದೆ ಎಂಬ ಬಗ್ಗೆ ತಕ್ಷಣ ಮಾಹಿತಿ ನೀಡಿದರೆ ಅಮೂಲ್ಯ ಜೀವಹಾನಿ ತಡೆಯಬಹುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಾಂಡ್ ಸೆಂಟರ್ ಮಾಹಿತಿ ನೀಡಿದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ರಾಜನ್, ಈ ತಂತ್ರಾಂಶದಲ್ಲಿ ಯಾವ ಸಿಬ್ಬಂದಿ ಎಷ್ಟು ಹೊತ್ತಿನಲ್ಲಿ ಯಾವ ವಲಯದಲ್ಲಿ ಗಸ್ತಿನಲ್ಲಿದ್ದರು ಎಂಬ ಮಾಹಿತಿ ಲಭಿಸಲಿದೆ.

ಅದೇ ರೀತಿ ವನ್ಯಜೀವಿಗಳು ನಾಡಿನತ್ತ ಬಂದಾಗ ಸಕಾಲಿಕ ಮಾಹಿತಿ ಪಡೆದು ಕಾಡಿನಂಚಿನ ಜನರಿಗೆ ವಾಟ್ಸ್ ಆಪ್ ಮತ್ತು ಇತರ ಮಾಧ್ಯಮಗಳ ಮೂಲಕ ಮಾಹಿತಿ ನೀಡಲು ಕಮಾಂಡ್ ಸೆಂಟರ್ ಮಹತ್ವದ ಪಾತ್ರ ವಹಿಸಲಿದೆ ಎಂದರು. ಶಾಸಕ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಡಿ.ಸಿ.ಎಫ್. ಭಾಸ್ಕರ್ ಇತರರು ಪಾಲ್ಗೊಂಡಿದ್ದರು.