ಗಡಿ ವಿವಾದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ: ಸಿಎಂ ಬೊಮ್ಮಾಯಿ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರು (ನ.24) : ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಯವರು ಸಭೆ ನಡೆಸಿದ್ದಾರೆ. ಆದರೆ, ಇದನ್ನು ಮಾತುಕತೆ ಮೂಲಕವೂ ವಿವಾದ ಬಗೆಹರಿಸಿಕೊಳ್ಳುವ ಬಗ್ಗೆ ಆಸಕ್ತಿ ಇರುವುದಾಗಿಯೂ ತಿಳಿಸಿರುವ ಮಾಹಿತಿ ದೊರೆತಿದೆ. ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಅವರು ದಾವೆ ಹೂಡಿದ್ದಾರೆ. ಈ ನ್ಯಾಯಾಯಲದಲ್ಲಿ ವಾದ ಮಂಡನೆಯ ನಿರ್ಣಯವನ್ನು ಸರ್ವಪಕ್ಷ ಸಭೆ ಹಾಗೂ ಗಡಿ ಪ್ರಾಧಿಕಾರದೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಕರ್ನಾಟಕ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸುವುದಾಗಿ ನಿರ್ಧಾರ ಕೈಗೊಂಡಿದೆ ಎಂದರು.
ಗಡಿ ವಿವಾದ: ಮಹಾ ಬಿಜೆಪಿ ಡಿಸಿಎಂ V/S ಕರ್ನಾಟಕ ಬಿಜೆಪಿ ಸಿಎಂ ಟಾಕ್ ವಾರ್..!
ಮುಂದಿನ ವಾರ ಸರ್ವಪಕ್ಷ ಸಭೆ : ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಿದ್ದು, ಮಹಾರಾಷ್ಟ್ರ ರಾಜ್ಯದ ಮಾತುಕತೆ ಮೂಲಕ ವಿವಾದ ಬಗೆಹರಿಸುವ ಇಂಗಿತ ಸೇರಿದಂತೆ ಎಲ್ಲ ವಿಷಯಗಳನ್ನು ಸಮಗ್ರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಈಗ ಗಡಿ ವಿವಾದವೇ ಮುಗಿದುಹೋಗಿದೆ. ಆದರೆ, ಮಹಾರಾಷ್ಟ್ರ ರಾಜ್ಯದವರು ಮತ್ತೆ ವಿವಾದವನ್ನು ಎಬ್ಬಿಸಿದ್ದಾರೆ. ಗ್ರಾಮಪಂಚಾಯತಿ ನಿರ್ಣಯ ಹಾಗೂ ಪೂರಕ ವರದಿಗಳೆಲ್ಲವೂ ಇದೆ. ಬರುವ ದಿನಗಳಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.
ಸರಣಿ ಟ್ವೀಟ್ ಮೂಲಕ ತಿರುಗೇಟು: ಗಡಿ ವಿವಾದದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಬುಧವಾರ ಸರಣಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದರು. ಜೊತೆಗೆ, ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ. ಮಹಾರಾಷ್ಟ್ರ ಸರ್ಕಾರ 2004ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ ಎಂದು ಕಿಡಿಕಾರಿದ್ದರು.
ಫಡ್ನವೀಸ್ ಕನಸು ನನಸಾಗುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು
ವಿವಾದದ ಹಿನ್ನೆಲೆಯೇನು? : ಗಡಿ ವಿವಾದಕ್ಕೆ ಕಿಚ್ಚು ಹಬ್ಬಿಸುವ ಸಲುವಾಗಿ, ಕರ್ನಾಟಕದ ಮರಾಠಿ ಭಾಷಿಕ ಸ್ವಾತಂತ್ರ್ಯ ಹೋರಾಟಗಾರರಿಗೂ ಪಿಂಚಣಿ ನೀಡುವ ಮತ್ತು ಮರಾಠಿ ಭಾಷಿಕ ಜನರಿಗೂ ಆರೋಗ್ಯ ವಿಮೆ ಒದಗಿಸುವ ಚಿಂತಿಸುವ ಕುರಿತು ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ತಿರುಗೇಟು ನೀಡಿದ್ದ ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ, ಗೋವಾ ವಿಮೋಚನೆ, ಕರ್ನಾಟಕ ಏಕೀಕರಣ ಹೋರಾಟದಲ್ಲಿ ಭಾಗಿಯಾದ ನೆರೆ ರಾಜ್ಯದಲ್ಲಿ ಇರುವ ಜನರಿಗೆ ಪಿಂಚಣಿ ನೀಡುವ, ಮಹಾರಾಷ್ಟ್ರದಲ್ಲಿನ ಕನ್ನಡ ಭಾಷಿಕ ಪ್ರದೇಶಗಳಿಗೆ ವಿಶೇಷ ಅನುದಾನ ನೀಡುವ ಮತ್ತು ಜತ್ ತಾಲೂಕನ್ನು ಕರ್ನಾಟಕ ಸೇರಿಸುವ ಬಗ್ಗೆ ಚಿಂತಿಸುವ ಮಾತುಗಳನ್ನು ಆಡುವ ಮೂಲಕ ಮಹಾರಾಷ್ಟ್ರಕ್ಕೆ ತಿರುಗೇಟು ನೀಡಿದ್ದರು.