ಅಂಫನ್‌ ಎಫೆಕ್ಟ್: ರಾಜ್ಯದ ಹಲವೆಡೆ ಭಾರೀ ಮಳೆ| ಭಾಗಮಂಡಲದಲ್ಲಿ ಗರಿಷ್ಠ 13 ಸೆಂ.ಮೀ. ವರ್ಷಧಾರೆ| ಇನ್ನೆರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು(ಮೇ.19): ‘ಅಂಫನ್‌’ ಚಂಡಮಾರುತದ ಪ್ರಭಾವದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನು ಎರಡು ದಿನ ರಾಜ್ಯದಲ್ಲಿ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗಿನ ಭಾಗಮಂಡಲದಲ್ಲಿ ಅತಿ ಹೆಚ್ಚು 13 ಸೆಂ.ಮೀ ಮಳೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 11ಸೆಂ.ಮೀ, ದಕ್ಷಿಣ ಕನ್ನಡದ ಸುಳ್ಯ, ಬಳ್ಳಾರಿ ಜಿಲ್ಲೆ ಹರಪನಹಳ್ಳಿಯಲ್ಲಿ ತಲಾ 8ಸೆಂ.ಮೀ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ 7ಸೆಂ.ಮೀ, ಚಿಕ್ಕಮಗಳೂರಿನ ಅಜ್ಜಂಪುರ, ರಾಮನಗರದ ಚನ್ನರಾಯಪಟ್ಟಣದಲ್ಲಿ ತಲಾ 6 ಸೆಂ.ಮೀ ಮಳೆಯಾದ ವರದಿಯಾಗಿದೆ.

180 ಕಿ.ಮೀ. ವೇಗದಲ್ಲಿ ಬರಲಿದೆ ‘ಅಂಫನ್‌’ ಮಾರುತ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ‘ಅಂಫನ್‌’ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಮಳೆಯ ಮಾರುತ ಚುರುಕುಗೊಂಡಿದ್ದು, ಭಾನುವಾರ ಕೊಡಗು, ದಕ್ಷಿಣ ಕನ್ನಡ, ದಾವಣಗೆರೆ, ಕೊಪ್ಪಳ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ಒಂದು ದಿನ ಹಾಗೂ ಮಲೆನಾಡು ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಸೋಮವಾರ ಕರಾವಳಿ, ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಂಗಳವಾರ ‘ಅಂಫನ್‌’ ಚಂಡಮಾರುತದ ತೀವ್ರತೆ ಕಡಿಮೆಯಾಗಲಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ರೆಡ್ಡಿ ಮಾಹಿತಿ ನೀಡಿದ್ದಾರೆ.