ಚೀನಾ ಕಂಪನಿಗಳ ಸೆಳೆಯಲು ವಾರಕ್ಕೊಮ್ಮೆ ಸಭೆ ನಡೆ​ಸಿ| ವಿಶೇಷ ಕಾರ‍್ಯಪಡೆಯ ಚಟುವಟಿಕೆ ಪರಿಶೀಲನೆಗೆ ಸಿಎಸ್‌ಗೆ ಸೂಚನೆ

ಬೆಂಗಳೂರು(ಮೇ.22): ಚೀನಾದಲ್ಲಿರುವ ಕೈಗಾರಿಕೋದ್ಯಮಿಗಳು ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ರಚಿಸಿರುವ ವಿಶೇಷ ಕಾರ್ಯಪಡೆಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

Add Asianetnews Kannada as a Preferred SourcegooglePreferred

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ, ಎಂಎಸ್‌ಎಂಇ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹ ಯೋಜನೆಯನ್ನು ರೂಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕಾರ್ಖಾನೆಗಳಲ್ಲಿ ಪ್ರಸ್ತುತ ಶೇ.70ರಷ್ಟುಕೈಗಾರಿಕೆಗಳು ಪುನರಾರಂಭಗೊಂಡಿವೆ. ಈ ನಿಟ್ಟಿನಲ್ಲಿ ಕೈಗಾರಿಕಾ ವಲಯದ ಪರಿಣತರೊಂದಿಗೆ, ಅಂತಾರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳೊಂದಿಗೆ ಸರ್ಕಾರವು ಸಮಾಲೋಚನೆ ನಡೆಸುತ್ತಿದೆ. ಇದಲ್ಲದೆ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಕೈಗಾರಿಕೋದ್ಯಮಿಗಳಿಗೆ ಜಮೀನು ಖರೀದಿಸುವ ಪ್ರಕ್ರಿಯೆ ಸರಳಗೊಂಡಿದ್ದು, ಇದರಿಂದ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಹೊರ ದೇಶದಿಂದ ಆಮದಾಗುತ್ತಿದ್ದ ಪಿಪಿಇ ಕಿಟ್‌ಗಳನ್ನು ದೇಶದಲ್ಲಿಯೇ ತಯಾರಿಸಲು ಉತ್ತೇಜನ ನೀಡಲಾಗಿದ್ದು, ರಾಜ್ಯದಲ್ಲಿ 22 ಘಟಕಗಳು ಈಗ ಪಿಪಿಇ ಕಿಟ್‌ಗಳನ್ನು ಉತ್ಪಾದಿಸುತ್ತಿವೆ. 4 ಸಂಸ್ಥೆಗಳು ವೆಂಟಿಲೇಟರುಗಳ ತಯಾರಿಕೆ ಮಾಡುತ್ತಿವೆ. ಸ್ಯಾನಿಟೈಸರ್‌ ಕೊರತೆ ನೀಗಿಸಲು 40ಕ್ಕೂ ಹೆಚ್ಚು ಡಿಸ್ಟಿಲರಿಗಳಿಗೆ ಪರವಾನಗಿ ನೀಡಿ, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಕೊರೋನಾಪೀಡಿತ ಜುಬಿಲಿಯಂಟ್‌ ಕಾರ್ಖಾನೆ ಪುನಾರಂಭ

ರಾಜ್ಯದಲ್ಲಿ ಎಲ್ಲಾ ಔದ್ಯೋಗಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಕೋವಿಡ್‌-19ನಿಂದಾಗಿ ಮುಚ್ಚಲಾಗಿದ್ದ ಜುಬಿಲಿಯಂಟ್‌ ಕಾರ್ಖಾನೆಯನ್ನು ಸಹ ತೆರೆಯಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ತಿಳಿಸಿದ್ದಾರೆ.