ಮಡಿಕೇರಿ ನಗರದ ಮಹದೇವ ಪೇಟೆಯ ಜಿಲ್ಲಾ ಆಯುಷ್ ಇಲಾಖೆ ವ್ಯಾಪ್ತಿಯ ನೂತನ ಕಚೇರಿಯನ್ನು ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಉದ್ಘಾಟಿಸಿದರು. 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಶಾಸಕರು ಉದ್ಘಾಟಿಸಿದರು. 

ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಡಗು (ನ.10): ಮಡಿಕೇರಿ ನಗರದ ಮಹದೇವ ಪೇಟೆಯ ಜಿಲ್ಲಾ ಆಯುಷ್ ಇಲಾಖೆ ವ್ಯಾಪ್ತಿಯ ನೂತನ ಕಚೇರಿಯನ್ನು ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಉದ್ಘಾಟಿಸಿದರು. 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಶಾಸಕರು ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಮೈಸೂರು ಜೆಎಸ್‍ಎಸ್ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಶಾನಂದ ಶರ್ಮ, ನಗರಸಭಾ ಸದಸ್ಯರಾದ ರಾಜೇಶ್ ಯಲ್ಲಪ್ಪ ಇತರರು ಇದ್ದರು. 

ಬಳಿಕ 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವ ಇದ್ದು, ಅದನ್ನು ಬಲಪಡಿಸುವತ್ತ ಗಮನಹರಿಸಬೇಕು ಎಂದು ಹೇಳಿದರು. ಆಯುಷ್ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಆಯುರ್ವೇದ ವೈದ್ಯರ ಭರ್ತಿಗೆ ಕ್ರಮವಹಿಸಲಾಗುವುದು. ಹಾಗೆಯೇ ಆಯುರ್ವೇದ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು. 

ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವುದೇ ಬಿಜೆಪಿ-ಜೆಡಿಎಸ್ ಮೈತ್ರಿ ಆದ್ಯತೆ: ಎಚ್‌ಡಿಕೆ

ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ ಆಯುರ್ವೇದವು ವಿಶ್ವ ಆರೋಗ್ಯ ಸಂಸ್ಥೆಯಿಂದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ಮಾನ್ಯತೆ ಪಡೆದಿದೆ. ಕೇಂದ್ರ ಆಯುಷ್ ಸಚಿವಾಲಯವು ಧನ್ವಂತರಿ ಜಯಂತಿಯನ್ನು 2016 ರ ಅಕ್ಟೋಬರ್, 26 ರಂದು ರಾಷ್ಟ್ರೀಯ ಆಯುರ್ವೇದ ದಿನವನ್ನಾಗಿ ಘೋಷಿಸಿದೆ ಎಂದು ತಿಳಿಸಿದರು. ‘ಪ್ರತಿದಿನ ಪ್ರತಿ ಮನೆಯಲ್ಲೂ ಆಯುರ್ವೇದ’. ಇದರ ಅಂಗವಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ರೈತರಿಗೆ, ಶಾಲೆಯ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ವಿವಿಧ ಆಯುರ್ವೇದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.