ಬಾಗಲಕೋಟೆಯ ಕಾಂಗ್ರೆಸ್ ಶಾಸಕ ಹುಲ್ಲಪ್ಪ ಮೇಟಿ ನಿಧನವಾಗಿದ್ದಾರೆ. ಹೆಚ್ವೈ ಮೇಟಿ ಅವರು ಐದು ಬಾರಿ ಶಾಸಕರಾಗಿದ್ದರು. ಮೇಟಿ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ.
ಬೆಂಗಳೂರು: ಬಾಗಲಕೋಟೆಯ ಕಾಂಗ್ರೆಸ್ ಶಾಸಕ ಹುಲ್ಲಪ್ಪ ಮೇಟಿ ನಿಧನವಾಗಿದ್ದಾರೆ. ಹೆಚ್ವೈ ಮೇಟಿ ಅವರು ಐದು ಬಾರಿ ಶಾಸಕರಾಗಿದ್ದರು. ಮೇಟಿ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ. ಹುಲ್ಲಪ್ಪ ಯಮನಪ್ಪ ಮೇಟಿ ಅವರಿಗೆ 79 ವರ್ಷ ವಯಸ್ಸು ಆಗಿದ್ದು, ಬಹು ಅಂಗಾಂಗ ವೈಫಲ್ಯಗಳಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹುಲ್ಲಪ್ಪ ಮೇಟಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅಕ್ಟೋಬರ್ 30ರಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಮೇಟಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಶಾಸಕರು ಇಂದು ನಿಧನರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ.
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ
ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
