ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಕೆಲ ಕಡೆ ತೆರವು ಮಾಡಿದ್ದ ಜಮೀನುಗಳು ಮತ್ತೆ ಕಬಳಿಕೆಯಾಗಿವೆ. ಹೀಗಾಗಿ ಇನ್ನು ಮುಂದೆ ಒತ್ತುವರಿ ತೆರವುಗೊಳಿಸಿದ ಜಮೀನುಗಳ ಬಗ್ಗೆ ನಿಗಾವಹಿಸಲು ಪೊಲೀಸರ ಬೀಟ್‌ ಮಾದರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಬೀಟ್‌ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ: ಸಚಿವ ಕೃಷ್ಣ ಬೈರೇಗೌಡ 

ವಿಧಾನ ಪರಿಷತ್‌(ಜು.13): ಒತ್ತುವರಿದಾರರಿಂದ ಮರುವಶಕ್ಕೆ ಪಡೆದ ಸರ್ಕಾರಿ ಜಮೀನುಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನೇ ಬಳಸಿಕೊಂಡು ‘ಬೀಟ್‌ ವ್ಯವಸ್ಥೆ’ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ಪ್ರಶ್ನೋತ್ತರದ ವೇಳೆ ಬಿಜೆಪಿ ಸದಸ್ಯ ವೈ.ಎ.ನಾರಾಯಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಕೆಲ ಕಡೆ ತೆರವು ಮಾಡಿದ್ದ ಜಮೀನುಗಳು ಮತ್ತೆ ಕಬಳಿಕೆಯಾಗಿವೆ. ಹೀಗಾಗಿ ಇನ್ನು ಮುಂದೆ ಒತ್ತುವರಿ ತೆರವುಗೊಳಿಸಿದ ಜಮೀನುಗಳ ಬಗ್ಗೆ ನಿಗಾವಹಿಸಲು ಪೊಲೀಸರ ಬೀಟ್‌ ಮಾದರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಬೀಟ್‌ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಫಸಲ್‌ ಬಿಮಾ ಯೋಜನೆಗೆ ರಾಜ್ಯ ಸರ್ಕಾರ ಗುಡ್‌ಬೈ?: ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯೆ

ಸರ್ಕಾರಿ ಭೂಮಿ ಒತ್ತುವರಿ ಎಲ್ಲ ಸರ್ಕಾರಗಳ ಆಡಳಿತದ ಅವಧಿಯಲ್ಲೂ ಇತ್ತು. ಒತ್ತುವರಿ ತೆರವು ಸರ್ಕಾರದ ಇಚ್ಛಾಶಕ್ತಿಯ ಮೇಲೆ ನಡೆಯುತ್ತದೆ. ಇರುವ ಕಾನೂನುಗಳನ್ನೇ ಬಳಸಿಕೊಂಡು ವ್ಯವಸ್ಥಿತವಾಗಿ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿ ತಿಂಗಳು ಒತ್ತುವರಿ ತೆರವು ಅಭಿಯಾನ ನಡೆಸಲಾಗುವುದು. ಅಧಿಕಾರಿಗಳಿಗೆ ಗುರಿ ನಿಗದಿ ಪಡಿಸಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿರುವ ಸರ್ಕಾರಿ ಜಮೀನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 14,660 ಪ್ರಕರಣಗಳಲ್ಲಿ 38,947 ಎಕರೆ ಸರ್ಕಾರಿ ಜಮೀನು ಕಬಳಿಕೆಯಾಗಿದೆ. ಈ ಪೈಕಿ 1,292 ಪ್ರಕರಣಗಳಲ್ಲಿ 3,898 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 1,292 ಪ್ರಕರಣಗಳಲ್ಲಿ 3,898 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಇದರಲ್ಲಿ 376 ಪ್ರಕರಣಗಳಲ್ಲಿ 3,249 ಎಕರೆ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ವೇಳೆ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ಜಮೀನು ಒತ್ತುವರಿ ಪ್ರಕರಣಗಳಲ್ಲಿ ಸರ್ಕಾರದಿಂದ ನೇಮಕವಾಗುವ ವಕೀಲರೇ ಭೂಗಳ್ಳರ ಪರ ಕೆಲಸ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗೆ ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌ ಜತೆ ಚರ್ಚಿಸಿದ್ದೇನೆ. ಈ ಬಗ್ಗೆಯೂ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.