ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರುವಿನ ಶಿರಚ್ಛೇದ ಮಾಡಿದ ದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಈ ಘಟನೆಯು ದುಷ್ಕರ್ಮಿಗಳ ಕೃತ್ಯವಿರಬಹುದೇ ಅಥವಾ ಇತ್ತೀಚೆಗೆ ಕಾಣಿಸಿಕೊಂಡಿದ್ದ ಚಿರತೆಯ ದಾಳಿಯೇ ಎಂಬ ಗೊಂದಲ ಮೂಡಿಸಿದೆ. ಈ ಕೃತ್ಯಕ್ಕೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ.

ಗದಗ (ಡಿ2): ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವು ಸ್ಥಳೀಯರಲ್ಲಿ ತೀವ್ರ ಗೊಂದಲ ಮೂಡಿಸಿದ್ದು, ಒಂದೆಡೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಚಿರತೆ ದಾಳಿಯಿಂದ ಕರು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಗದಗ ಎಪಿಎಂಸಿ ಮಾರುಕಟ್ಟೆ ಬಳಿ ಕೃತ್ಯ

ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಈ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಚಿರತೆಯ ಕೃತ್ಯ?:

ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಚಿರತೆಯು ಕೊಂದ ನಂತರ ದೇಹವನ್ನು ಎಳೆದು ತಂದಿರಬಹುದು ಎಂದು ಊಹಿಸಲಾಗಿದೆ.

ಕರುವಿನ ದೇಹ ಪತ್ತೆಯಾದ ಕೂಡಲೇ ಸುದ್ದಿ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

--