ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ಐತಿಹಾಸಿಕ ಕ್ಷೇತ್ರ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮತ್ತು ನೂತನ ವಸ್ತುಸಂಗ್ರಹಾಲಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಯಣ್ಣನ ಬಲಿದಾನದ ಭೂಮಿಯಲ್ಲಿ ನಿರ್ಮಿಸಲಾದ ಈ ಭವ್ಯ ಸ್ಮಾರಕವು ಅವರ ವೀರಗಾಥೆಯನ್ನು ಸಾರಲಿದೆ. 

ಬೆಳಗಾವಿ (ಜ.18): ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಐತಿಹಾಸಿಕ ಕ್ಷೇತ್ರ ನಂದಗಡದಲ್ಲಿ ನಾಳೆ ಸಂಭ್ರಮದ ವಾತಾವರಣ ನಿರ್ಮಾಣವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾಗೂ ನೂತನವಾಗಿ ನಿರ್ಮಿಸಲಾದ ಭವ್ಯ ವಸ್ತುಸಂಗ್ರಹಾಲಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಯಣ್ಣನ ಬಲಿದಾನದ ಭೂಮಿಯಲ್ಲಿ ಅವರ ವೀರಗಾಥೆಯನ್ನು ಸಾರುವ ಈ ವಸ್ತುಸಂಗ್ರಹಾಲಯ ನಾಳೆ ಅಧಿಕೃತವಾಗಿ ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಣ್ಯರ ದಂಡಿನೊಂದಿಗೆ ಆಗಮಿಸಲಿರುವ ಮುಖ್ಯಮಂತ್ರಿ

ಈ ಮಹತ್ವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ರಾಜ್ಯದ ಪ್ರಭಾವಿ ನಾಯಕರ ದಂಡೇ ಸಾಥ್ ನೀಡಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವರಾದ ಶಿವರಾಜ್ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬೆಳಗಾವಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ. ರಾಯಣ್ಣನ ಇತಿಹಾಸವನ್ನು ಸ್ಮರಿಸುವ ಈ ವೇದಿಕೆಯಲ್ಲಿ ರಾಜ್ಯದ ಪ್ರಮುಖ ಸಚಿವರು ಹಾಜರಿರಲಿದ್ದಾರೆ.

ಸಿಎಂ ಪ್ರವಾಸದ ಕಂಪ್ಲೀಟ್ ಶೆಡ್ಯೂಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 11.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ನಂದಗಡ ಗ್ರಾಮಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂದಗಡದಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆಯ ಕಾರ್ಯಕ್ರಮಕ್ಕೆ ನಂದಗಡ ಸಜ್ಜು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಬಲಿದಾನದ ಸ್ಥಳವಾದ ನಂದಗಡದಲ್ಲಿ ನಾಳೆಯ ಸಮಾರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಕ್ಷಾಂತರ ಅಭಿಮಾನಿಗಳು ಮತ್ತು ಸಾರ್ವಜನಿಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಈ ವಸ್ತುಸಂಗ್ರಹಾಲಯವು ಮುಂಬರುವ ದಿನಗಳಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮತ್ತು ರಾಯಣ್ಣನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಸಾರುವ ಕೇಂದ್ರವಾಗಿ ಹೊರಹೊಮ್ಮಲಿದೆ.