ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದ್ದ ಗುಣಮಟ್ಟ ನಿಯಂತ್ರಣ ಘಟಕದ ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್‌ ಶಿವಕುಮಾರ್‌ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು (ಆ.28): ರಾಜ್ಯ ರಾಜಧಾನಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿದ್ದ ಗುಣಮಟ್ಟ ನಿಯಂತ್ರಣ ಘಟಕದ ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್‌ ಶಿವಕುಮಾರ್‌ ಸ್ಥಿತಿ ಗಂಭೀರವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಬಿಎಂಪಿ ಗುಣನಿಯಂತ್ರಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಟ್ಟು 9 ಮಂದಿ ಗಾಯತಗೊಂಡಿದ್ದರು. ಅದರಲ್ಲಿ 7 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು. ಉಳಿದಂತೆ ಮುಖ್ಯ ಇಂಜಿನಿಯರ್‌ ಶಿವಕುಮಾರ್‌ ಮತ್ತೊಬ್ಬ ಮಹಿಳಾ ಸಿಬ್ಬಂದಿಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಐಸಿಯು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು. ಗಂಭೀರ ಗಾಯದಿಂದ ಬಳಲುತ್ತಿದ್ದ ಗಾಯಾಳು ಶಿವಕುಮಾರ್ ಅವರು ಇರುವ ಆಸ್ಪತ್ರೆಗೆ ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿ, ಆರೋಗ್ಯ ಪರಿಶೀಲನೆ ಮಾಡಿದ್ದರು.

ಬಿಬಿಎಂಪಿ: ‘ಬೆಂಕಿ’ಗೆ ಅವಸರದ ಪರೀಕ್ಷೆಯೇ ಕಾರಣ; ಆಂತರಿಕ ತನಿಖೆ ಬಹಿರಂಗ

ನಗರದ ಖಾಸಗಿ ಅಸ್ಪತ್ರೆಯಲ್ಲಿ ಶಿವಕುಮಾರ್ ಅವರಿಗೆ ಮೂರ್ನಾಲ್ಕು ದಿನದಿಂದ ಹೆಚ್ಚಿನ ನಿಗಾದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಶಿವಕುಮಾರ್ ಬಿಬಿಎಂಪಿಯ ಸೂಪರಟೆಂಡೆಂಟ್ ಇಂಜಿನಿಯರ್ ಪಾಲಿಕೆಯಲ್ಲಿ ಕಳೆದ 16 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಬೆಂಕಿ ಅವಘಡ ನಡೆದ ನಂತರ ಕಳೆದ 9 ದಿನಗಳ ಹಿಂದೆ ಖಾಸಗಿ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂಜನಗೂಡು ಮೂಲದವರಾದ ಶಿವಕುಮಾರ್‌ ಅವರಿಗೆ ಪತ್ನಿ ಹಾಗೂ ಇಬ್ಬರು ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳು ಇದ್ದಾರೆ.

ಶಿವಕುಮಾರ್‌ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಕೊಟ್ಟ ಮುಖ್ಯ ಆಯುಕ್ತರು: ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಮುಖಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು, ಪಾಲಿಕೆ ಕೇಂದ್ರ ಕಚೇರಿಯ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಗುಣ ನಿಯಂತ್ರಣ ವಿಭಾಗದ ಮುಖ್ಯ ಅಭಿಯಂತರರಾದ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯರಿಂದ ಉತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದರೆ, ಕೆಲ ಮಾಧ್ಯಮಗಳು ಮುಖ್ಯ ಅಭಿಯಂತರರಾದ ಶಿವಕುಮಾರ್ ಸಾವನ್ನಪ್ಪಿದ್ದಾರೆ ಎಂದು ಸುದ್ದಿಯನ್ನು ಪ್ರಸರಿಸುತ್ತಿದ್ದು, ವೈದ್ಯರು ಅಧಿಕೃತವಾಗಿ ಮಾಹಿತಿ ನೀಡುವವರೆಗೆ ಮತ್ತು ಮೆಡಿಕಲ್ ಬುಲೆಟಿನ್ ನೀಡುವ ವರೆಗೆ ಈ‌ ಕುರಿತು ವದಂತಿಗಳನ್ನು ಪ್ರಸಾರ ಮಾಡದಂತೆ ಮನವಿ ಮಾಡಿದ್ದಾರೆ.