ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌.ಸಿ.ಬಿ. ತಂಡದ ಅಭಿನಂದನಾ ಸಮಾರಂಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸಾರ್ವಜನಿಕರು/ಮಾಧ್ಯಮದವರು ಸಾಕ್ಷ್ಯ ನೀಡಬಹುದು. ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಜರಾಗಿ ಲಿಖಿತ ಹೇಳಿಕೆ ನೀಡಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು (ಜೂ.26): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ) ಕ್ರಿಕೆಟ್ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸರ್ಕಾರದ ಆದೇಶದ ಮೇರೆಗೆ ವಿಚಾರಣಾಧಿಕಾರಿಗಳಾದ ಬೆಂಗಳೂರು ನಗರ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ.ಜಿ ಸಮಗ್ರವಾದ ವಿಚಾರಣೆಯನ್ನು ನಡೆಸುತ್ತಿರುತ್ತಾರೆ.

Add Asianetnews Kannada as a Preferred SourcegooglePreferred

ಈ ಘಟನೆಗೆ ಸಂಬಂಧಿಸಿದ ಮಾಹಿತಿ ಅಥವಾ ಪ್ರತ್ಯಕ್ಷವಾಗಿ ನೋಡಿದ ಸಾರ್ವಜನಿಕರು/ ಮಾಧ್ಯಮದವರು ವಿಚಾರಣಾಧಿಕಾರಿಗಳ ಸಮಕ್ಷಮದಲ್ಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.

ತಮ್ಮ ಹೇಳಿಕೆಯನ್ನು ದಾಖಲಿಸಲು ಇಚ್ಛಿಸುವವರು ಜೂ.27ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿ ತಮ್ಮ ಲಿಖಿತ ರೂಪದ ಪ್ರಮಾಣಿತ ಅಫಿಡವಿಟ್‌ನ 2 ಪ್ರತಿಗಳೊಂದಿಗೆ ಖುದ್ದು ಹಾಜರಾಗಿ ಹೇಳಿಕೆಯನ್ನು ದಾಖಲಿಸಬಹುದಾಗಿದೆ ಎಂದು ವಿಚಾರಣಾಧೀನ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.