ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡ ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಅಕ್ಟೋಬರ್ 29ರವರೆಗೆ ವ್ಯಾಪಕ ಮಳೆ ಸಾಧ್ಯತೆ

  1. ಬೆಂಗಳೂರು (ಅ.22): ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಮತ್ತು ಚಿಕ್ಕಬಳ್ಳಾಪುರ ಈ 5 ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿರುವುದರಿಂದ ಅಕ್ಟೋಬರ್ 29 ರವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Add Asianetnews Kannada as a Preferred SourcegooglePreferred

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ:

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಯನಗರ, ಲಾಲ್‌ಬಾಗ್ ಸುತ್ತಮುತ್ತ ಸಣ್ಣ ಪ್ರಮಾಣದ ಮಳೆಯಾಗುತ್ತಿದ್ದು, ಜಿಟಿಜಿಟಿ ಮಳೆ ಸವಾರರಿಗೆ ಕಿರಿಕಿರಿ ಉಂಟಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಮುಕ್ತಾಯವಾಗಿ, ಹಿಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮೇಲೆ ಬೀರಲಿದ್ದು, ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ 13 ಜಿಲ್ಲೆಗಳಿಗೆ ಈಗಾಗಲೇ ಮಳೆ ಅಲರ್ಟ್ ಘೋಷಿಸಲಾಗಿದೆ.

ಕೆಆರ್ ಮಾರ್ಕೆಟ್: ಮಳೆ ನಡುವೆಯೂ ವ್ಯಾಪಾರ

ಇನ್ನು, ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಜಿಟಿಜಿಟಿ ಮಳೆಯ ನಡುವೆಯೂ ವ್ಯಾಪಾರಿಗಳು ಚಟುವಟಿಕೆಯಿಂದ ವ್ಯಾಪಾರ ಮುಂದುವರೆಸಿದ್ದಾರೆ. ಮಳೆಯನ್ನೂ ಲೆಕ್ಕಿಸದೆ ಗ್ರಾಹಕರು ಖರೀದಿಗೆ ಆಗಮಿಸುತ್ತಿದ್ದಾರೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.