ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಮತ್ತು ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್, ಹಣ ವಸೂಲಿ, ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಎಸ್‌ಪಿ ಈ ಕ್ರಮ ಕೈಗೊಂಡಿದ್ದಾರೆ.

ಕಾರವಾರ(ಡಿ.24): ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದ ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ ಉತ್ತರಕನ್ನಡ ಎಸ್‌ಪಿ ದೀಪನ್ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಅಮಾನತು

ಕೆಲವು ದಿನಗಳ ಹಿಂದೆ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ವಿರುದ್ಧ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಾಗಿತ್ತು. ಈ ಕುರಿತು ನಡೆದ ಪ್ರಾಥಮಿಕ ತನಿಖೆಯಲ್ಲಿ ಅವರು ತಪ್ಪು ಮಾಡಿರುವುದು ದೃಢಪಟ್ಟಿದೆ. ಕರ್ತವ್ಯ ಲೋಪ ಹಾಗೂ ನಿಯಮ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದ ಎಸ್‌ಪಿ ದೀಪನ್ ಅವರು, ಉನ್ನತ ತನಿಖೆಗೆ ಆದೇಶಿಸಿ ಸಿಪಿಐ ಅವರನ್ನು ಅಮಾನತು ಮಾಡಿದ್ದಾರೆ.

ವಸೂಲಿ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪ

ಸಿಪಿಐ ಮಂಜುನಾಥ್ ವಿರುದ್ಧ ಕೇವಲ ಕುಡಿದು ವಾಹನ ಚಲಾಯಿಸಿದ ಆರೋಪವಷ್ಟೇ ಅಲ್ಲದೆ, ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದು ಹಾಗೂ ಅಕ್ರಮ ದನ ಸಾಗಾಟಗಾರರಿಗೆ ಸಾಥ್ ನೀಡುತ್ತಿದ್ದ ಆರೋಪಗಳು ಇವರ ಮೇಲಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆಯಲ್ಲಿ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ದಂಡದ ಹಣ ಲಪಟಾಯಿಸಿ ಕೋರ್ಟ್‌ಗೆ ಅಗೌರವ

ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 15 ಸಾವಿರ ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿತ್ತು. ನಿಯಮದ ಪ್ರಕಾರ ಈ ಹಣವನ್ನು ನ್ಯಾಯಾಲಯಕ್ಕೆ ಪಾವತಿಸಬೇಕಿತ್ತು. ಆದರೆ, ಆ ಹಣವನ್ನು ಕೋರ್ಟ್‌ಗೆ ಕಟ್ಟದೆ ಅಧಿಕಾರಿಗಳೇ ಲಪಟಾಯಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಜುಲೈ ತಿಂಗಳಲ್ಲಿ ದಾಖಲಾದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ.

ದೂರುದಾರರಿಗೆ ಬೆದರಿಕೆ ಹಾಕಿದ್ದ ಹೆಡ್ ಕಾನ್ಸ್ಟೆಬಲ್ ಅಮಾನತು

ಈ ಪ್ರಕರಣದಲ್ಲಿ ಸಿಪಿಐ ಮಂಜುನಾಥ್ ಅವರಿಗೆ ಸಾಥ್ ನೀಡಿದ್ದ ಭಟ್ಕಳ ಗ್ರಾಮೀಣ ಠಾಣೆಯ ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನೂ ಅಮಾನತು ಮಾಡಲಾಗಿದೆ. ಸಿಪಿಐ ವಿರುದ್ಧ ದೂರು ನೀಡದಂತೆ ದೂರುದಾರರಿಗೆ ಗದರಿಸಿ, ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಶೋಕ ನಾಯ್ಕ್ ವಿರುದ್ಧ ಈ ಶಿಸ್ತುಕ್ರಮ ಜರುಗಿಸಲಾಗಿದೆ.

ಎಸ್‌ಪಿ ದೀಪನ್ ಅವರ ಖಡಕ್ ಸೂಚನೆ

ಡ್ರಿಂಕ್ ಆ್ಯಂಡ್ ಡ್ರೈವ್, ಜನರಿಂದ ಅಕ್ರಮ ಹಣ ವಸೂಲಿ ಹಾಗೂ ನ್ಯಾಯಾಲಯದ ಪ್ರಕ್ರಿಯೆಗಳಿಗೆ ಅಗೌರವ ತೋರಿದ ಅಧಿಕಾರಿಗಳ ವಿರುದ್ಧದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಎಸ್‌ಪಿ ಅವರು ಈ ಕ್ರಮ ಕೈಗೊಂಡಿದ್ದಾರೆ. ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಎಸಗುವ ಸಿಬ್ಬಂದಿಗೆ ಈ ಅಮಾನತು ಆದೇಶವು ಒಂದು ಎಚ್ಚರಿಕೆಯ ಸಂದೇಶವಾಗಿದೆ.