ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಪ್ರತಿಪಕ್ಷ ಬಿಜೆಪಿ ಶುಕ್ರವಾರದಿಂದ ಒಂದು ವಾರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಬೆಂಗಳೂರು : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಪ್ರತಿಪಕ್ಷ ಬಿಜೆಪಿ ಶುಕ್ರವಾರದಿಂದ ಒಂದು ವಾರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

Add Asianetnews Kannada as a Preferred SourcegooglePreferred

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ ಎಂದರು.

ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು. ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ನಾವು ಸಂಪೂರ್ಣವಾಗಿ ಬೆಂಬಲ ನೀಡಿದ್ದೆವು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ಹೇಳಿದರು.ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಬೇರೆ ಬೇರೆ ಸಂದರ್ಭದಲ್ಲಿ 24 ಗಂಟೆ ಒಳಗಾಗಿ ಎಫ್ಐಆರ್ ದಾಖಲಿಸುತ್ತಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 81 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತ ಪೂವಪ್ಪ ಅವರ ಮನೆಗೆ ರಾತ್ರಿ 1 ಗಂಟೆಗೆ ಪೊಲೀಸ್ ಅಧಿಕಾರಿಗಳು ಹೋಗಿ ಫೋಟೋ ತೆಗೆಯುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರು ಪೋಸ್ಟ್ ಮಾಡಿದರೆ ತಡಮಾಡದೆ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಹಾಕಿ ಎಫ್ಐಆರ್ ದಾಖಲಿಸಿ ಬಂಧಿಸಿರುವುದನ್ನು ಕಳೆದ ಎರಡೂವರೆ ವರ್ಷಗಳಲ್ಲಿ ನೋಡಿದ್ದೇವೆ. ಆದರೆ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಧರ್ಮಸ್ಥಳ ಗ್ರಾಮದ ವಿಚಾರ ಬಂದಾಗ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುತ್ತಿರುವ ಅಪಪ್ರಚಾರಗಳನ್ನು ರಾಜ್ಯ ಸರ್ಕಾರ ತಡೆಯುವ ಕೆಲಸ ಮಾಡಲಿಲ್ಲ. ಇದು ವ್ಯವಸ್ಥಿತ ಷಡ್ಯಂತ್ರ. ಈ ಅಪಪ್ರಚಾರ ತಡೆಯುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇರಲಿಲ್ಲವೇ ಅಥವಾ ರಾಜ್ಯ ಸರ್ಕಾರವೇ ಈ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದೆಯೇ ಎಂದು ಕಿಡಿಕಾರಿದರು.

ಸರ್ಕಾರ ಯಾಕೆ ಕ್ರಮ ಕೈಗೊಳ್ತಿಲ್ಲ?

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರು ಪೋಸ್ಟ್ ಮಾಡಿದರೆ ತಡಮಾಡದೆ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಹಾಕಿ ಎಫ್ಐಆರ್ ದಾಖಲಿಸಿ ಬಂಧಿಸಲಾಗುತ್ತಿದೆ. ಆದರೆ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?

- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ