ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಯಾವುದೇ ಬಸ್‌ಗಳು ರಸ್ತೆಗಿಳಿದಿಲ್ಲ. ಈ ಮುಷ್ಕರ ಮುಂದುವರೆಯುವ ಬಗ್ಗೆ ಕೋಡಿಳ್ಳಿ ಚಂದ್ರಶೇಖರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಏ.07): ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಿಂದಾಗಿ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದೆ.

Add Asianetnews Kannada as a Preferred SourcegooglePreferred

ಈ ಮುಷ್ಕರ ನಾಳೆಯೂ (ಏ.08) ಮುಂದುವರೆಯುತ್ತಿದ್ದು, ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಇಂದು (ಬುಧವಾರ) ರಾಜ್ಯ ರಸ್ತೆ ಸಾರಿಗೆ ನೌಕರರ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.

'ಮಠ-ಮಂದಿರ, ಅಭಿವೃದ್ಧಿ ನಿಗಮಗಳಿಗೆ ಕೊಡಲು ಹಣವಿದೆ, ಸಾರಿಗೆ ನೌಕರರಿಗೆ ಹಣವಿಲ್ಲವೇ'? 

ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಾವು ಸಿದ್ಧರಿದ್ದೇವೆ. ಸರ್ಕಾರವು ಕೋವಿಡ್ ನೆಪ ಹೇಳಿ ಸಂಬಳ ಕಡಿಮೆ ನೀಡುತ್ತಿದೆ. ಮಠ, ಮಂದಿರಗಳಿಗೆ ಹಣ ನೀಡಲು ಎಲ್ಲಿಂದ ಬರುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಈ ತಾರತಮ್ಯ ನೀತಿಯನ್ನು ಬಿಡಬೇಕು. 6ನೇ ವೇತನ ಆಯೋಗದಂತೆ ವೇತನ ನೀಡಬೇಕು. ಇದು ನಮ್ಮ ಮುಖ್ಯ ಬೇಡಿಕೆ. ಎಸ್ಮಾ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಸಾರಿಗೆ ನೌಕರರ ಪರ ಹೋರಾಟಗಾರರು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

ಸಾರಿಗೆ ನೌಕರರ ಮುಷ್ಕರದಿಂದಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್ಸುಗಳ ಓಡಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಅಲ್ಲದೇ, ರಾಜ್ಯವ್ಯಾಪಿ ಹೆಚ್ಚುವರಿ ರೈಲುಗಳ ವ್ಯವಸ್ಥೆಯನ್ನು ಮಾಡಿದೆ.