ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ವಿಭಾಗೀಯ ಸಂಚಾರ ನಿಯಂತ್ರಕ ಕೆ.ಬಿ.ರಾಮಕೃಷ್ಣ ರೆಡ್ಡಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಮೂರು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 70 ಲಕ್ಷ ರೂಪಾಯಿ ದಂಡ ವಿಧಿಸಿದೆ. 2014ರಲ್ಲಿ ಲೋಕಾಯುಕ್ತ ದಾಳಿಯಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿತ್ತು.
ಬೆಂಗಳೂರು (ನ.4): ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
ಲೋಕಾಯುಕ್ತರು ದಾಖಲಿಸಿದ್ದ ಕೇಸ್:
ಬಿಎಂಟಿಸಿ ವಿಭಾಗೀಯ ಸಂಚಾರ ನಿಯಂತ್ರಕ ಕೆ.ಬಿ.ರಾಮಕೃಷ್ಣ ರೆಡ್ಡಿ ಶಿಕ್ಷೆಗೆ ಗುರಿಯಾದವರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ.ರಾಮಕೃಷ್ಣ ರೆಡ್ಡಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಬಳಿಕ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಕೆ.ಬಿ.ರಾಮಕೃಷ್ಣ ರೆಡ್ಡಿ ಅವರು ಆದಾಯಕ್ಕಿಂತ 61.45 ಲಕ್ಷ ರು. ಮೌಲ್ಯದ ಅಧಿಕ ಆಸ್ತಿ ಹೊಂದಿರುವುದನ್ನು ಬಯಲಿಗೆ ತಂದಿದ್ದರು. ಈ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಮೂರು ವರ್ಷ ಜೈಲು, 70 ಲಕ್ಷ ದಂಡ ವಿಧಿಸಿದ ಕೋರ್ಟ್
ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಅ.31ರಂದು ಆರೋಪಿ ಕೆ.ಬಿ.ರಾಮಕೃಷ್ಣ ರೆಡ್ಡಿಗೆ ಮೂರು ವರ್ಷ ಕಠಿಣ ಸಜೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಅಂತಿಮ ತೀರ್ಪು ನೀಡಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಸಾದ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪುನಲ್ಲಿ ಉಲ್ಲೇಖಿಸಿದೆ. ಲೋಕಾಯುಕ್ತ ಪೊಲೀಸರ ಪರ ಸರ್ಕಾರಿ ಅಭಿಯೋಜಕ ಮಂಜುನಾಥ ಹೊನ್ನಯ್ಯ ನಾಯಕ್ ಅವರು ಸಮರ್ಪಕ ವಾದ ಮಂಡಿಸಿದ್ದರು.
