ಮಂಗಳವಾರ ಬೆಳಗ್ಗೆ ಭಟ್ಕಳ ತಹಶೀಲ್ದಾರ್ ಕಚೇರಿಗೆ ಈಮೇಲ್ ಮೂಲಕ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಬಂದಿದ್ದು, ಆವರಣದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಈಮೇಲ್‌ನಲ್ಲಿ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧವೂ ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ.

ಕಾರವಾರ, ಉತ್ತರಕನ್ನಡ (ಡಿ.16): ಮಂಗಳವಾರ ಬೆಳಗ್ಗೆ ಭಟ್ಕಳ ತಹಸೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಕಚೇರಿ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ 7.25ಕ್ಕೆ 'ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ' ಎಂಬ ಈಮೇಲ್ ಮೂಲಕ ಈ ಸಂದೇಶ ರವಾನೆಯಾಗಿದ್ದು, 'ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು: ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ಬೇಗ ತೆರವುಗೊಳಿಸಿ! ಎಂದು ಕನ್ನಡದಲ್ಲಿ ಎಚ್ಚರಿಕೆ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸ್ ಬಿಗಿ ಬಂದೋಬಸ್ತ್, ಪರಿಶೀಲನೆ

ಈ ತಕ್ಷಣದ ಬೆದರಿಕೆಯ ಹಿನ್ನೆಲೆಯಲ್ಲಿ, ಯಾವುದೇ ಅನಾಹುತವಾಗದಂತೆ ತಡೆಯಲು ತಹಶೀಲ್ದಾರ್ ಕಚೇರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಾಂಬ್ ಹಾಗೂ ಡಾಗ್ ಸ್ಕ್ವಾಡ್ ಕಚೇರಿ ಆವರಣವನ್ನು ಪರಿಶೀಲಿಸಲು ಸಿದ್ಧತೆ ನಡೆಸಿವೆ.

ತಮಿಳನಾಡು ಡಿಎಂಕೆ ಸರ್ಕಾರದ ವಿರುದ್ಧ ಆರೋಪ:

ಬಾಂಬ್ ಬೆದರಿಕೆ ಮಾತ್ರವಲ್ಲದೆ, ಅನಾಮಿಕ ಕಳುಹಿಸಿದ ಈಮೇಲ್‌ನಲ್ಲಿ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧ ಹಲವು ತಲೆಬುಡವಿಲ್ಲದ ಆರೋಪಗಳನ್ನು ಮಾಡಲಾಗಿದೆ. ಪ್ರಶಾಂತ್ ಕಿಶೋರ್ ಮತ್ತು ಸುನೀಲ್ ಕನುಗೋಲು ಸೂಚನೆಯ ಮೇರೆಗೆ ಡಿಎಂಕೆ ಸರ್ಕಾರವು 2001ರಲ್ಲಿ ಮಾಧ್ಯಮವನ್ನು ಬುಡಮೇಲು ಮಾಡಲು ಯತ್ನಿಸಿತ್ತು ಎಂದು ಆರೋಪಿಸಲಾಗಿದೆ. 

ಅಲ್ಲದೆ, ರಾಧಾಕೃಷ್ಣನ್ ಐಪಿಎಸ್ ಹಾಗೂ ಜಾಫರ್ ಸೇಟ್ ಮೂಲಕ 'ಗೆಲಿಲಿಯೋ ಆ್ಯಪ್' ಬಳಸಿ ಕನ್ನಡಿಗರ ಮೇಲೆ ಗೂಡಾಚಾರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಡಿಎಂಕೆ ನಾಯಕ ಉದಯನಿಧಿ ಅವರ ಉದ್ದೇಶ ಹಣಗಳಿಸುವುದಕ್ಕಿಂತ ಹೆಚ್ಚಿದೆ ಎಂಬ ಸಂದೇಶವನ್ನೂ ಈಮೇಲ್‌ನಲ್ಲಿ ಬರೆಯಲಾಗಿದೆ. ಇದಕ್ಕಿಂತಲೂ ಗಂಭೀರವಾಗಿ, ಹಲವು ಅನಾಥಾಶ್ರಮಗಳ ಹೆಣ್ಣುಮಕ್ಕಳನ್ನು ಲೈಂಗಿಕ ಉದ್ದೇಶಕ್ಕೆ ಬಳಸಲಾಗುತ್ತಿದ್ದು, ಡಿಎಂಕೆ ನಾಯಕತ್ವಕ್ಕೆ ಇದರ ಬಗ್ಗೆ ಮಾಹಿತಿ ಇದೆ ಎಂದು ಆಪಾದಿಸಿ, ಈಮೇಲ್ ಅನ್ನು ಏನೇನೋ ಬರೆದು ಕಳುಹಿಸಲಾಗಿದೆ.