ಕಾರವಾರದ ಸಿದ್ದರ ಗ್ರಾಮದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ನಿಲಯದಲ್ಲಿ ಕಸಕ್ಕೆ ಬೆಂಕಿ ಹಾಕುವಾಗ ಅವಘಡ ಸಂಭವಿಸಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರಕನ್ನಡ (ಆ.11): ಕಸಕ್ಕೆ ಬೆಂಕಿ ಹಾಕುವಾಗ ಒಮ್ಮೆಲೆ ಬೆಂಕಿ ತಗುಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ನಿಲಯದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ದಾಕ್ಷಾಯಣಿ, ತೇಜಸ್ವಿನಿ ಮತ್ತು ಪ್ರೇಮ ಎಂಬ ವಿದ್ಯಾರ್ಥಿನಿಯರು ಬೆಂಕಿ ತಗುಲಿ ಗಾಯಗೊಂಡವರು. ತೇಜಸ್ವಿನಿಯ ಕಾಲು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ, ಆದರೆ ದಾಕ್ಷಾಯಣಿ ಮತ್ತು ಪ್ರೇಮ ಇಬ್ಬರಿಗೂ ಕೈಗೆ ಸ್ವಲ್ಪ ಗಾಯಗಳಾಗಿವೆ. ಘಟನೆಯ ನಂತರ ಮೂವರನ್ನೂ ತಕ್ಷಣ ಕಾರವಾರದ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಕಾರ, ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಕಾರವಾರ ತಹಶೀಲ್ದಾರ್ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ಪ್ರಾಥಮಿಕ ಮಾಹಿತಿಯಂತೆ, ಕಸಕ್ಕೆ ಬೆಂಕಿ ಹಾಕುವಾಗ ಅಗ್ನಿ ಒಮ್ಮೆಲೇ ಬೆಂಕಿ ಹೊತ್ತಿಕೊಂಡು ವಿದ್ಯಾರ್ಥಿನಿಯರಿಗೆ ತಗುಲಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಮತ್ತು ವಿದ್ಯಾರ್ಥಿನಿಯರ ಕುಟುಂಬಸ್ಥರು ಆತಂಕದಲ್ಲಿದ್ದು, ಆಸ್ಪತ್ರೆಯ ಸಿಬ್ಬಂದಿ ಎಲ್ಲರಿಗೂ ಸೂಕ್ತ ಚಿಕಿತ್ಸೆ ಒದಗಿಸುವ ಭರವಸೆ ನೀಡಿದ್ದಾರೆ. ಈ ಘಟನೆಯಿಂದಾಗಿ ವಿದ್ಯಾರ್ಥಿನಿಯರ ನಿಲಯದಲ್ಲಿ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗಳೆದ್ದಿವೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.