ರಾಜ್ಯ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. 'ಸಾವಿರ ದಿನ-ಸಾವಿರ ಸಮಸ್ಯೆ' ಪೋಸ್ಟರ್ ಬಿಡುಗಡೆ ಮಾಡಿದರು.
ಬೆಂಗಳೂರು (ಫೆ.15): ರಾಜ್ಯ ಕಾಂಗ್ರೆಸ್ ಸರ್ಕಾರವು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆಯಲ್ಲಿ ಮುಳುಗಿರುವ ಮುಖ್ಯಮಂತ್ರಿ ಮತ್ತು ಸಚಿವರು ಸಾವಿರ ಸುಳ್ಳು ಹೇಳಿ ರಾಜ್ಯದ ಬಡವರು, ರೈತರು, ಮಹಿಳೆಯರು ಹಾಗೂ ಯುವ ಜನತೆಗೆ ಅನ್ಯಾಯ ಎಸಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ‘ಸಾವಿರ ದಿನ-ಸಾವಿರ ಸಮಸ್ಯೆ’ ಎಂಬ ಪೋಸ್ಟರ್ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ಮೋದಿ ಈ ದೇಶದ ಬಡವರು, ರೈತರು, ಮಹಿಳೆಯರು ಮತ್ತು ಯುವಕರ ಬದುಕು ಕಟ್ಟಿಕೊಡಲು ಕಾಯಕವೇ ಕೈಲಾಸ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ 16 ದಾಖಲೆ ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಎಂಬಂತಿವೆ ಎಂದು ಟೀಕಿಸಿದರು.
ಜಾತಿ ಗಣತಿ ವರದಿ ಕೆಆರ್ಎಸ್ ಡ್ಯಾಂಗೆ:
ಹಿಂದೆ 170 ಕೋಟಿ ರು. ವೆಚ್ಚದಲ್ಲಿ ಜಾತಿಗಣತಿ ಮಾಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ಆದೇಶದ ಕಾರಣಕ್ಕೆ ಆ ವರದಿ ತಿಪ್ಪೆಗೆ ಎಸೆದಿದ್ದರು. ಈಗ 450 ಕೋಟಿ ರು. ವೆಚ್ಚದಲ್ಲಿ ಎರಡನೇ ಬಾರಿ ಜಾತಿ ಗಣತಿ ಮಾಡಿಸಿ, ಅವರ ಸ್ವಕ್ಷೇತ್ರದ ಪಕ್ಕದ ಕೆಆರ್ಎಸ್ ಡ್ಯಾಮ್ಗೆ ಬಿಡಲು ಹೊರಟಿದ್ದಾರೆ. ಎಸ್ಸಿ-ಎಸ್ಟಿ ಮತ್ತು ಹಿಂದುಳಿದ ವರ್ಗಗಳನ್ನು ಕೇವಲ ಮತ ಬ್ಯಾಂಕಾಗಿ ದುರ್ಬಳಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಜನರ ಕಿವಿಗೆ ಹೂ ಇಟ್ಟರು:
ರಾಜ್ಯದ ಜನರಿಗೆ ಗ್ಯಾರಂಟಿ ಆಸೆ ಹುಟ್ಟಿಸಿ, ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಭ್ರಷ್ಟಾಚಾರದ ಆರೋಪ ಮಾಡಿ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಬಳಿಕ ರಾಜ್ಯದ ಜನರ ಕಿವಿಗೆ ಹೂವು ಮುಡಿಸುವ ಕೆಲಸ ಮಾಡಿದೆ. ಭ್ರಷ್ಟಾಚಾರ ಯಾವ ರೀತಿ ಮಾಡಬೇಕು ಎಂಬುದಕ್ಕೆ ಮುಡಾ ಹಾಗೂ ಇತರೆ ಪ್ರಕರಣಗಳೇ ಮಾದರಿ. ಅಭಿವೃದ್ಧಿಯಲ್ಲಿ ಕರ್ನಾಟಕ 20-25 ವರ್ಷ ಹಿಂದಕ್ಕೆ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆ ದಿವಾಳಿ ಮಾಡಿದ್ದಾರೆ. 2.85 ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡದೆ ಯುವ ಜನತೆಗೆ ಧೋಖಾ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
ಈಡೇರದ ಭರವಸೆಗಳು:
ಹಳೇ ಪಿಂಚಣಿ ವ್ಯವಸ್ಥೆ ವಿಸ್ತರಣೆ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಏರಿಕೆ ಭರವಸೆ ಬಗ್ಗೆ ಚಕಾರ ಎತ್ತುತ್ತಿಲ್ಲ. ನೀರಾವರಿ ಯೋಜನೆಗಳಿಗೆ 1.50 ಲಕ್ಷ ರು. ಅನುದಾನ, ಮೈಸೂರು, ಮಂಗಳೂರು, ಹುಬ್ಬಳ್ಳಿಗಳಲ್ಲಿ ಟೆಕ್ ಪಾರ್ಕ್ ನಿರ್ಮಾಣ, 1 ಲಕ್ಷ ಉದ್ಯೋಗ ಸೃಷ್ಟಿ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.



