ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ  ಸಿಎಂ ಕುರ್ಚಿಗಾಗಿ ಆಂತರಿಕ ಕಿತ್ತಾಟ ನಡೆಯುತ್ತಿದ್ದು, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ  ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಳೇಬೀಡು (ನ.22): ರಾಜ್ಯದಲ್ಲಿ ಅಭಿವೃದ್ಧಿ ಇದ್ದರೆ ತಾನೇ ಕುಂಠಿತ ಆಗೋಕೆ. ಕಾಂಗ್ರೆಸ್ ಸರ್ಕಾರ ಗುಂಡಿ ಮುಚ್ಚಲು ಕೂಡ ಅನುದಾನ ಕೊಡುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ರಾಜೀನಾಮೆ ಕೊಡುವ ಹಂತಕ್ಕೆ ಹೋಗಿದ್ದಾರೆ. ರಾಜ್ಯದ ರೈತರ ಬಗ್ಗೆ ಇವರಿಗೆ ಕಿಂಚಿತ್ತು ಕಾಳಜಿ ಇಲ್ಲ. ಬದಲಾಗಿ ಸಿದ್ದರಾಮಯ್ಯ ಅವರನ್ನುಕೆಳಗಿಳಿಸಲು ಒಂದಷ್ಟು ಜನ, ಅವರ ಪರ ಇನ್ನೊಂದಷ್ಟು ಜನ ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ? 

ಹಾಸನದ ಹಳೇಬೀಡು ಸಮೀಪ ಪುಷ್ಪಗಿರಿ ಮಠದ ಲಕ್ಷ ದೀಪೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯn.ದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರಾ? ಎಂದು ಪ್ರಶ್ನೆ ಮಾಡುವಂತಾಗಿದೆ. ಗೃಹ ಸಚಿವರು ನಿಸ್ಸಹಾಯಕರಾಗಿದ್ದು, ಪಾಪ ಅವರಿಗೆ ಏನು ಗೊತ್ತಿಲ್ಲ ಎಂದರು.

ಇದರ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಕೆಲವರು ಸಿಎಂ ಕುರ್ಚಿಗೆ ಟವಲ್ ಹಾಕಿಕೊಂಡು ಕೂತಿದ್ದಾರೆ ಎಂದರು.

ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ, ಕುರ್ಚಿಗಾಗಿ ಕಿತ್ತಾಟ:

ಕಳೆದ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗಾಗಿ ಯಾವುದೇ ಅನುದಾನ ನೀಡಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು, ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಅಸಮಾಧಾನದ ಲಾಭ ಪಡೆಯುವ ಅವಶ್ಯಕತೆ ನಮಗಿಲ್ಲ. ರಾಜ್ಯದ ಮತದಾರರು ನಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಈ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸವನ್ನು ನಿರ್ವಹಿಸುತ್ತೇವೆ ಎಂದರು.

ಇಡೀ ಮಂತ್ರಿಮಂಡಲ ದೆಹಲಿಯಲ್ಲಿ ಕುಳಿತಿದೆ:

ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಮರೆತಿದ್ದು, ಇಡೀ ಮಂತ್ರಿಮಂಡಲ ದೆಹಲಿಯಲ್ಲಿ ಕುಳಿತಿದೆ. ರಾಜ್ಯದ ರೈತರ ಬಗ್ಗೆ ಕಿಂಚಿತ್ತು ಕಾಳಜಿ ತೋರಿಸುತ್ತಿಲ್ಲ. ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಆರೋಪಿಸಿದರು.

ಬಿಹಾರ ಚುನಾವಣೆ ಫಲಿತಾಂಶದ ನಂತರ ನಮ್ಮ ರಾಜ್ಯದ ಬಿಜೆಪಿ ಕಾರ್ಯಕರ್ತರಿಗೆ ರಣೋತ್ಸಾಹ ಬಂದಿದೆ. ರಾಜ್ಯದಲ್ಲಿ ಯಾವಾಗಲೇ ಚುನಾವಣೆ ನಡೆದರೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎನ್ನುವ ವಾತಾವರಣವಿದೆ. ನಮ್ಮ ಕಾರ್ಯಕರ್ತರು ಉತ್ಸಾಹದಲ್ಲಿದ್ದು, ನಾವು ಒಟ್ಟಾಗಿ ಬಲ ತುಂಬುವ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು.