ತೀರ್ಪಿನ ಅಧ್ಯಯನ ಬಳಿಕ ಅಂತಿಮ ತೀರ್ಮಾನ, ಅಗತ್ಯಬಿದ್ದರೆ ಕಾನೂನು ತಿದ್ದುಪಡಿಗೆ ಮಸೂದೆ

ಬೆಂಗಳೂರು(ಆ.13): ಭಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಪಡಿಸುವ ವಿಚಾರದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಸಚಿವ ಸಂಪುಟದಲ್ಲಿ ಅನೌಪಚಾರಿಕವಾಗಿ ಚರ್ಚಿಸಿದ್ದು, ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗೆ ಬದ್ಧವಾಗಿ ತೀರ್ಮಾನ ಕೈಗೊಳ್ಳಲಾಗುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆಯ ರಾಜಭಾಷಾ ಆಯೋಗ ಮತ್ತು ಭಾಷಾಂತರ ನಿರ್ದೇಶನಾಲಯದಿಂದ ಹೊರತಂದಿರುವ ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆಯ ದ್ವಿಭಾಷಾ ಕನ್ನಡ ಆವೃತ್ತಿ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

Add Asianetnews Kannada as a Preferred SourcegooglePreferred

ಎಸಿಬಿ ರದ್ದು ಮಾಡುವ ವಿಚಾರದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಲಾಗಿದೆ. ಎಸಿಬಿ ರದ್ದು ಮಾಡುವ ಬಗ್ಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಈ ವಿಚಾರ ನ್ಯಾಯಾಲಯದಲ್ಲಿ ಇದ್ದಿದ್ದರಿಂದ ಇಷ್ಟುದಿನ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಈಗ ಹೈಕೋರ್ಟ್‌ ತೀರ್ಪು ಬಂದಿದೆ. ಎಸಿಬಿಯನ್ನು ರದ್ದುಪಡಿಸುವಂತೆ ನ್ಯಾಯಾಲಯವೇ ಹೇಳಿದೆ. ಹೀಗಾಗಿ ಈ ತೀರ್ಪಿನ ಅಧ್ಯಯನ ಮಾಡಿ ವರದಿ ನೀಡುವಂತೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ ಅವರಿಗೆ ಹೇಳಿದ್ದೇನೆ. ಇವರು ಕೊಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗೆ ಬದ್ಧವಾಗಿ ತೀರ್ಮಾನ ಮಾಡಲಾಗುವುದು. ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!

ನಿರ್ಧಾರ ಆಗಿಲ್ಲ- ಮಾಧುಸ್ವಾಮಿ:

ಮತ್ತೊಂದೆಡೆ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಎಸಿಬಿ ರದ್ದುಪಡಿಸುವಂತೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಯಾವುದೇ ನಿರ್ಧಾರ ಮಾಡಿಲ್ಲ. ಹೈಕೋರ್ಟ್‌ ಆದೇಶದ ಬಗ್ಗೆ ಚರ್ಚೆ ಮಾಡಬೇಕಿದೆ. ಎಸಿಬಿ ರದ್ದುಪಡಿಸುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ನಾವು ಬದ್ಧವಾಗಿದ್ದೇವೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಹೈಕೋರ್ಟ್‌ ಆದೇಶ ಜಾರಿಗೆ ತರುವ ನಿಟ್ಟಿನಲ್ಲಿ ಮುಂದಿನ ನಿರ್ಧಾರ ಮಾಡಲಾಗುವುದು ಎಂದರು.

ಕೊಟ್ಟಿರುವ ಆಶ್ವಾಸನೆಗೆ ಬದ್ಧವಾಗಿ ತೀರ್ಮಾನ

ಎಸಿಬಿ ರದ್ದು ಮಾಡುವ ಬಗ್ಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಈ ವಿಚಾರ ನ್ಯಾಯಾಲಯದಲ್ಲಿ ಇದ್ದಿದ್ದರಿಂದ ಇಷ್ಟುದಿನ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗೆ ಬದ್ಧವಾಗಿ ತೀರ್ಮಾನ ಮಾಡಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.