ಭವಿಷ್ಯದ ಬೆಂಗಳೂರಿನ ಬೆಳವಣಿಗೆಗಾಗಿ 7,200 ಕೋಟಿ ರು. ವೆಚ್ಚದಲ್ಲಿ 500 ಎಂಎಲ್‌ಡಿ ಕಾವೇರಿ ನೀರು ಪೂರೈಕೆಯ 6ನೇ ಹಂತದ ಯೋಜನೆ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಮಾಡಿ ಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚಿಸಿರುವು ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 

ಬೆಂಗಳೂರು (ಅ.17): ಭವಿಷ್ಯದ ಬೆಂಗಳೂರಿನ ಬೆಳವಣಿಗೆಗಾಗಿ 7,200 ಕೋಟಿ ರು. ವೆಚ್ಚದಲ್ಲಿ 500 ಎಂಎಲ್‌ಡಿ ಕಾವೇರಿ ನೀರು ಪೂರೈಕೆಯ 6ನೇ ಹಂತದ ಯೋಜನೆ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಮಾಡಿ ಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚಿಸಿರುವು ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಮಾಡುವ ಕಾವೇರಿ 5ನೇ ಹಂತದ ಯೋಜನೆಯನ್ನು ಬುಧವಾರ ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದೆ. 

Add Asianetnews Kannada as a Preferred SourcegooglePreferred

ಅದು ಈಗ ತಮ್ಮಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಇದು ಮತ್ತೊಂದು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಕಾವೇರಿ 5ನೇ ಹಂತದಿಂದ ಬೆಂಗಳೂರಿನ 110 ಹಳ್ಳಿಯ ಜನರಿಗೆ ಕಾವೇರಿ ನೀರು ಪೂರೈಕೆ ಆಗಲಿದೆ. ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಕಾವೇರಿ 6ನೇ ಹಂತದ ಯೋಜನೆಯ ಅನುಷ್ಠಾನ ಅಗತ್ಯವಾಗಿದ್ದು, ಆರ್ಥಿಕ ನೆರವು ಪಡೆದು ಅನುಷ್ಠಾನಗೊಳಿಸುವ ಮೂಲಕ ಇಡೀ ಬೆಂಗಳೂರಿಗೆ ಶುದ್ಧ ಕುಡಿಯುವ ನೀರು ಕೊಡುವ ಕೆಲಸವನ್ನು ಮಾಡುತ್ತೇವೆ. ಎಂದರು. ಎಚ್.ಡಿ.ಕುಮಾರಸ್ವಾಮಿ 2006-08ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಬೆಂಗಳೂರು ನಗರಕ್ಕೆ 110 ಹಳ್ಳಿ ಹಾಗೂ 7 ನಗರ ಪಾಲಿಕೆಗಳನ್ನು ಸೇರ್ಪಡೆಗೊಳಿಸಿದ್ದು ಬಿಟ್ಟರೆ, ತಮ್ಮ ಅಧಿಕಾರಾವಧಿಯಲ್ಲಿ ಬೆಂಗಳೂರು ನಗರಕ್ಕೆ ಯಾವುದೇ ಮೂಲಸೌಕರ್ಯ ಒದಗಿಸಿಲ್ಲ.

3 ಹಗರಣ: ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು

ಕಳೆದ ಸರ್ಕಾರದ ಅವಧಿಯಲ್ಲಿ ಅಧಿಕಾರ ನಡೆಸಿದ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಸರ್ಕಾರಗಳು ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮತ್ತು ಬಿಬಿಎಂಪಿಯ ಶೇ.16ರಷ್ಟು ವಂತಿಕೆ ನೀಡಲಿಲ್ಲ. ಹೀಗಾಗಿ, ಯೋಜನೆ ವಿಳಂಬವಾಗಿದೆ ಎಂದು ದೂರಿದರು. ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೂಲಸೌಕರ್ಯ ಒದಗಿಸಿಕೊಡುವುದು ನಮ್ಮ ಜವಾಬ್ದಾರಿ ಎಂದು ಭಾವಿಸಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಈ ವರ್ಷ ಅನುಷ್ಠಾನಗೊಳಿಸುವುದಕ್ಕೆ ತೀರ್ಮಾನಿಸಲಾಗಿದೆ. ಜತೆಗೆ, ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ರಾಜ್ಯ ಸರ್ಕಾರದ 3.71 ಲಕ್ಷ ಕೋಟಿ ರು. ಮೊತ್ತದ ಬಜೆಟ್‌ನಲ್ಲಿ 1.20 ಲಕ್ಷ ಕೋಟಿ ರು. ಅನ್ನು ಅಭಿವೃದ್ಧಿ ಕಾರ್ಯಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು. 

ಕಾಂಗ್ರೆಸ್‌ ಸರ್ಕಾರ ಅನೇಕ ಮೂಲಸೌಕರ್ಯ ಒದಗಿಸುವ ಕೆಲಸವನ್ನು ಮಾಡುತ್ತಿದೆ. ಕೊಟ್ಟಮಾತಿನಂತೆನಡೆದುಕೊಂಡಿದೆ. ಜನರಿಗೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ, ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತನ್ನು ಮರೆಯುವುದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಕೆಆರ್‌ಎಸ್‌ ಹಾಗೂವಿ.ಸಿ.ನಾಲೆಆಧುನೀಕರಣಕ್ಕೆ 5 ಸಾವಿರ ಕೋಟಿ ರು. ನೀಡಬೇಕು. ಇದರಿಂದ ಬೆಂಗಳೂರಿನ ಮುಂದಿನ 50 -60 ವರ್ಷದ ಕುಡಿಯುವ ನೀರಿಗೆ ಸಹಕಾರಿಯಾಗಲಿದೆ ಎಂದು ಮನವಿ ಮಾಡಿದರು. 

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಮಳವಳ್ಳಿಯ ಶೈಕ್ಷಣಿಕ ಅಭಿವೃದ್ಧಿಗೆ ಮಲ್ಟಿಮೀಡಿಯಾ ನೀಡಬೇಕು. ಕ್ಷೇತ್ರದ ಯುವಕರಿಗೆ ಜಲಮಂಡಳಿಯ ಘಟಕದಲ್ಲಿ ಡಿ ಗ್ರೂಪ್ ಹಾಗೂ ತಾಂತ್ರಿಕ ಹುದ್ದೆಗಳನ್ನು ನೀಡಬೇಕು. ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು. ಭೂ ಸ್ವಾಧೀನ ಸಮಸ್ಯೆಗೆ ಪರಿಹಾರ ಮಾಡಿಕೊಡಬೇಕೆಂದು ಮನವಿ ಮಾಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಮಂಡ್ಯದ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕಾಲುವೆಗಳ ಮೂಲಕ ನೀರು ಹರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಲಿದೆ. 

ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಇಳಿದು ಹೊಸ ಜನಾದೇಶ ಪಡೆಯಲಿ: ಎಂ.ಪಿ.ರೇಣುಕಾಚಾರ್ಯ

ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಅವರ ಬೇಡಿಕೆಯಂತೆ 5 ಕೋಟಿ ರು. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್, ಶಾಸಕರಾದ ಎಸ್ .ಟಿ.ಸೋಮಶೇಖರ್, ಬೈರತಿ ಬಸವರಾಜು, ಎಸ್.ಆರ್. ವಿಶ್ವನಾಥ್, ಎಸ್. ರವಿ, ದಿನೇಶ್ ಗೂಳಿಗೌಡ, ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್‌ಪ್ರಸಾತ್ ಮನೋಹರ್, ಭಾರತದ ರಾಯಭಾರಿ ಕಚೇರಿಯ ಆರ್ಥಿಕ ಸಚಿವೆ ಹೂಕುಗೋ ಕ್ಕೋಕೋ, ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಕಾನ್ಸುಲ್ ಜನರಲ್ ಆಫ್ ಜಪಾನ್ ಇನ್ ಇಂಡಿಯಾದ ಟುಟೋಮು ಉಪಸ್ಥಿತರಿದ್ದರು.