ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದನ್ನು ವಿರೋಧಿಸಿ ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ರಾಜ್ಯ ಸರ್ಕಾರದ ವಿರುದ್ಧ ರೈತರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಬೆಂಗಳೂರು (ಆ.3): ತಮಿಳುನಾಡಿಗೆ ನೀರು ಹರಿಸಿರುವುದನ್ನು ವಿರೋಧಿಸಿ ಭಾನುವಾರವೂ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದವು.

ಮಂಡ್ಯದಲ್ಲಿ ಕಾವೇರಿ ಹಿತರಕ್ಷಣಾ ಸಮಿತಿ, ಕನ್ನಡಪರ ಸಂಘಟನೆಗಳು ಹಾಗೂ ಎಂ.ಎಂ.ಫೌಂಡೇಷನ್‌ ಪದಾಧಿಕಾರಿಗಳಿಂದ ಪ್ರತಿಭಟನೆಗಳು ನಡೆದವು. ನೀರು ಬಿಡುವುದಿಲ್ಲವೆಂದು ಮಾತು ಕೊಟ್ಟಿದ್ದ ರಾಜ್ಯ ಸರ್ಕಾರ ಇದೀಗ ಮಾತಿಗೆ ತಪ್ಪಿದೆ. ಸರ್ವಪಕ್ಷ ಸಭೆಗೆ ಮುನ್ನವೇ ತಮಿಳುನಾಡಿಗೆ ನೀರು ಹರಿಸಲಾರಂಭಿಸಿದೆ. ಹಾಗಿದ್ದ ಮೇಲೆ ಸರ್ವಪಕ್ಷ ಸಭೆ ಕರೆಯುವ ಅಗತ್ಯವೇನಿತ್ತು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಮಂಡ್ಯದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕುಂಬಾರರ ಜಾಗೃತಿ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಹಾಗೂ ಕರುನಾಡ ಸೇವಕರ ಸಂಘಟನೆಯ ಕಾರ್ಯಕರ್ತರು ಒಗ್ಗೂಡಿ ಖಾಲಿ ಮಡಿಕೆ ಪ್ರದರ್ಶಿಸುವುದರ ಮೂಲಕ ಪ್ರತಿಭಟಿಸಿದರು. ರಸ್ತೆ ತಡೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಷನ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ರೈತರಿಗೆ ಕುಣಿಕೆಯಾಗಿ ಎಳೆಯುವ ವಿಡಂಬನಾತ್ಮಕ ಅಣಕು ಪ್ರದರ್ಶನ ಮಾಡಿ, ಕಪ್ಪುಪಟ್ಟಿ ಧರಿಸಿ, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಮದ್ದೂರು ತಾಲೂಕಿನ ಮದ್ದೂರಿನ ಬೆಸಗರಹಳ್ಳಿ, ಕೊಪ್ಪಗಳಲ್ಲಿ ರೈತ ಸಂಘದ ಪುಟ್ಟಣ್ಣಯ್ಯ ಬಣದಿಂದ ರಸ್ತೆ ತಡೆ ನಡೆಸಲಾಯಿತು.

ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ, ಅವರು ರಾಮನಗರದ ಸಾರಿಗೆ ಬಸ್ ನಿಲ್ದಾಣದ ಫ್ಲಾಟ್ ಫಾರ್ಮ್‌ನಲ್ಲಿ ಮೇಕೆಗಳೊಂದಿಗೆ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ ಕನ್ನಡ ಕ್ರಿಯಾ ಸಮಿತಿಯವರು ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಹಾಸನ ಸೇರಿ ಕಾವೇರಿ ಕೊಳ್ಳದ ಇತರೆಡೆಯೂ ಪ್ರತಿಭಟನೆಗಳು ನಡೆದವು.

ಆ.13ರಂದು ಕರ್ನಾಟಕ ಬಂದ್

ಮೈಸೂರು: ಆ.13ರಂದು ಕರ್ನಾಟಕ ಬಂದ್ ಫಿಕ್ಸ್, ಬಂದ್ ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಬಂದ್‌ಗೆ ಕರೆ ಕೊಟ್ಟಿದ್ದೇವೆ.

ಕಾವೇರಿ ನೀರು ಒಂದೇ ವಿಚಾರ ಅಲ್ಲ. ಗಡಿ ಸಮಸ್ಯೆ, ಯುವಕರಿಗೆ ಉದ್ಯೋಗ, ಮೈಸೂರಿನ ಸಮಗ್ರ ಅಭಿವೃದ್ಧಿ, ಕಾವೇರಿ ನೀರು ಹಂಚಿಕೆ ವಿಚಾರ, ಬೆಳಗಾವಿ ಎಂಇಎಸ್ ಪುಂಡಾಟ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ ಎಂದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂದ್ ವಾಪಸ್ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.

ಯಾವುದೇ ಬಂದ್ ವಾಪಸ್ ಪಡೆಯೊಲ್ಲ:

ನಾವು ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ. ಈಗಾಗಲೇ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಆ.13ರಂದು ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಅವರು ತಿಳಿಸಿದರು.