ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ನಿಂದನೆ., ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಸಿಸಿಬಿ ಬಲೆ ಬೀಸಿದೆ.

ಬೆಂಗಳೂರು (ಏ.14): ಸಾಮಾಜಿಕ ಜಾಲತಾಣಗಳಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಪದಗಳಿಂದ ನಿಂದನೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಕಿಡಿಗೇಡಿಗಳಿಗೆ ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

ನಿಂದಿಸಿದ ಕಿಡಿಗೇಡಿಗಳು ದರ್ಶನ ಫ್ಯಾನ್ಸ್

ಕಳೆದ ವರ್ಷ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಹಾಗೂ ನಟ ದರ್ಶನ್ ಅವರ ಜಾಮೀನು ವಿಚಾರವಾಗಿ ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಕೆಲವರು ನಿಂದಿಸಿದ್ದರು. ಈ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ಪ್ರಕರಣ ದಾಖಲಾಯಿತು. ಆಗ ದರ್ಶನ್ ಅಭಿಮಾನಿಗಳು ಎನ್ನಲಾದ 49 ಜನರ ಪೈಕಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದರು.

14 ಆರೋಪಿಗಳ ವಿರುದ್ಧ ಆರೋಪ ಪಟ್ಟಿ

ಅಲ್ಲದೆ ನಗರದ ಎಸಿಎಂಎಂ ನ್ಯಾಯಾಲಯಕ್ಕೆ 14 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರು, ಇನ್ನುಳಿದವರನ್ನು ನಾಪತ್ತೆ ಆರೋಪಿಗಳು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ನ್ಯಾಯಾಲಯವು, ತಪ್ಪಿಸಿಕೊಂಡಿರುವವರ ಪತ್ತೆಗೆ ಸೂಚಿಸಿತ್ತು. ಅಂತೆಯೇ ಬಾಕಿ ಆರೋಪಿಗಳನ್ನು ಪತ್ತೆ ಹಚ್ಚಿ ತನಿಖೆಗೆ ಪೂರ್ಣಗೊಳಿಸಲು ಸಿಸಿಬಿ ಮತ್ತೆ ಕಾರ್ಯಾಚರಣೆಗಿಳಿದೆ ಎಂದು ತಿಳಿದು ಬಂದಿದೆ.