ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಗುಡ್ ನ್ಯೂಸ್, ದೇವೇಗೌಡರ ಮನವಿಗೆ ಸಿಕ್ಕಿತು ಫಲ, ಸಂಕಷ್ಟದಲ್ಲಿದ್ದ ಕರ್ನಾಟಕ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಅನುಮೋದನೆ ಸಿಕ್ಕಿದೆ.
ಬೆಂಗಳೂರು (ನ.01) ಹವಾಮಾನ ವೈಪರಿತ್ಯ, ಇಳುವರಿ ಸಮಸ್ಯೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಬಂಧ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಕೆಲ ವರ್ಷದಿಂದ ಕರ್ನಾಟಕ ಮಾವು ಬೆಳೆಗಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೇ ಕಾರಣದಿಂದ ಈ ಬಾರಿಯ ಮಾವಿನ ಸೀಸನ್ನಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿತವಾಗಿ ರೈತರು ಕಂಗಾಲಾಗಿದ್ದರು. ಕರ್ನಾಟಕ ಮಾವು ಬೆಳೆಗಾರರ ಸಂಕಷ್ಟದ ಕುರಿತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಇದೀಗ ದೇವೇಗೌಡರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, ಕರ್ನಾಟಕ ಮಾವು ಬೆಳೆಗಾರರ ನೆರವಿಗೆ ಧಾವಿಸಿದೆ.
ಮಾವು ಖರೀದಿಗೆ ಅನುಮೋದನೆ
ಕರ್ನಾಟಕ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಅನ್ನೋದು ಕೇಂದ್ರಕ್ಕೆ ಅರಿವಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ 2025–26ನೆ ಮಾರುಕಟ್ಟೆ ಋತುವಿನಲ್ಲಿ ಬೆಲೆ ಕೊರತೆ ಪಾವತಿ (PDP) ಯೋಜನೆಯಡಿಯಲ್ಲಿ ಕ್ವಿಂಟಲ್ಗೆ ₹1,616 ಮಾರುಕಟ್ಟೆ ಹಸ್ತಕ್ಷೇಪ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದನೆ ನೀಡಿದೆ. ಈ ಮೂಲಕ ಬೆಲೆಯೂ ಇಲ್ಲದೆ ಕಂಗಾಲಾಗಿದ್ದ ಕರ್ನಾಟಕ ಮಾವು ಬೆಳೆಗಾರರಿಗೆ ರಿಲೀಫ್ ಸಿಕ್ಕಿದೆ.
ಜೂನ್ ತಿಂಗಳಲ್ಲಿ ಪತ್ರ ಬರೆದಿದ್ದ ದೇವೇಗೌಡ
ಜೂನ್ ನಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ದೇವೇಗೌಡರು ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಕರ್ನಾಟಕದ ಮಾವು ಬೆಳೆಗಾರರ ಸಮಸ್ಯೆ ಕುರಿತು ಸುದೀರ್ಘ ಪತ್ರ ಬರೆದಿದ್ದರು. ಇದೇ ವೇಳೆ ಪರಿಹಾರದ ಮಾರ್ಗಗಳನ್ನು ಸೂಚಿಸಿದ್ದರು. ಈ ಪತ್ರದಲ್ಲಿ ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದರು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತ ಆಗಿದೆ. ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮಾವು ಬೆಳೆಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿಯೂ ಇಂತಹುದೇ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ತಾವು ಬೆಳೆಗಾರರ ನೆರವಿಗೆ ಬರಲು ದೇವೇಗೌಡರು ಮನವಿ ಮಾಡಿದ್ದರು.
NAFED ಮತ್ತು NCCF ಮೂಲಕ ಮಾವಿನ ಖರೀದಿಗಾಗಿ ಬೆಲೆ ಕೊರತೆ ಪಾವತಿ (PDP) ಮತ್ತು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಯನ್ನು ಪ್ರಾರಂಭಿಸುವಂತೆ ಕೇಂದ್ರವನ್ನು ವಿನಂತಿ ಮಾಡಿದ್ದರು. ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದೀಗ ಕರ್ನಾಟಕದ ಮಾವು ಬೆಳೆಗಾರರಿಗೆ ರಿಲೀಫ್ ಸಿಕ್ಕಿದೆ.
