ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿಂದುಳಿದ ವರ್ಗಗಳ ಆಯೋಗವು ಬೇರೆಯವರ ರಿಮೋಟ್ ಕಂಟ್ರೋಲ್ನಲ್ಲಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಕೆಲವು ಜಾತಿಗಳ ಮುಂದೆ ಕ್ರೈಸ್ತ್ ಟ್ಯಾಗ್ ನೀಡಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
ಬೆಂಗಳೂರು (ಸೆ.24): ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಅಲ್ಲಿರುವವರೇ ನಡೆಸುತ್ತಿಲ್ಲ. ಈ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾಜಿ, ಶೈಕ್ಷಣಿಕ ಸಮೀಕ್ಷೆ ಸಂಬಂಧ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕು. ಈಗಾಗಲೇ ಸಮೀಕ್ಷೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡಾಗಿದೆ. ಇದು ಹಿಂದುತ್ವ ವಿರೋಧಿ ನೀತಿ ಎಂದು ಆರೋಪಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಒಂದು ರಸ್ತೆ ಗುಂಡಿ ಮುಚ್ಚಲು 5 ಲಕ್ಷ ಖರ್ಚು ಮಾಡ್ತಿದ್ಯಾ ಸರ್ಕಾರ?
ಸಮೀಕ್ಷೆಯ ಗೊಂದಲ ಪರಿಹರಿಸಲು ಕೋರಿ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಿ ಮನವಿ ನೀಡಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು. ಈ ಸಂಬಂಧ ಪ್ರಭಾವಿ ಸಮುದಾಯಗಳು ಹೋರಾಟಕ್ಕೆ ಇಳಿದಾಗ ಅವುಗಳನ್ನು ಕಾಣದಂತೆ ಮಾಡಿದ್ದಾರೆ. ಆದರೆ, ಪರಿಶಿಷ್ಟ ಜಾತಿ, ವರ್ಗಗಳದು ಹೈಡ್ ಮಾಡಿಲ್ಲ. ಇದರಿಂದ ಗೊಂದಲವಾಗಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ಮನೆ ಹೊರಗೂ ರಸ್ತೆಗಳಲ್ಲಿ ಗುಂಡಿಗಳಿವೆ: ಡಿಸಿಎಂ
ಕ್ರೈಸ್ತರಾಗಿ ಮತಾಂತರ ಹೊಂದಿದವರ ಮೂಲಜಾತಿ ಹಾಗೇ ಉಳಿಯುತ್ತದೆ ಎಂದು ಹೇಳಿದ್ದಾರೆ. ಅದು ಉಳಿಯಲು ಹೇಗೆ ಸಾಧ್ಯ? ಮೂಲಜಾತಿಯಲ್ಲೇ ಮೀಸಲಾತಿ ಕೊಡಬೇಕೇ ಎಂದು ತೀರ್ಮಾನ ಮಾಡುತ್ತಾರಂತೆ. ನ್ಯಾಯಾಲಯವೇ ತೀರ್ಮಾನಿಸಿರುವಾಗ ಮತ್ತೆ ತೀರ್ಮಾನಿಸಲು ಇವರು ಯಾರು? ದಲಿತರು ಕ್ರೈಸ್ತರಾಗಿ ಸೇರಿದರೆ ಅವರನ್ನು ದಲಿತರೆಂದು ಪರಿಗಣಿಸಲಾಗುವುದಿಲ್ಲ. ಇಲ್ಲಿ ಗೊಂದಲವಿದೆ ಎಂದು ಹೇಳಿದರು.
ಸದಾಶಿವ ಆಯೋಗ, ನಾಗಮೋಹನ್ ದಾಸ್ ಆಯೋಗ, ಕಾಂತರಾಜು ಆಯೋಗ, ಜಯಪ್ರಕಾಶ್ ಹೆಗ್ಡೆ ಆಯೋಗದಲ್ಲಿ ಪರಿಶಿಷ್ಟ ಜಾತಿಗೆ ಕ್ರಿಶ್ಚಿಯನ್ ಪದ ಇರಲಿಲ್ಲ. ಈಗ ಎಲ್ಲಿಂದ ಯಾಕೆ ಹುಟ್ಟಿದೆ? ಈ ಬಗ್ಗೆ ಇಂದೇ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುವುದಾಗಿ ಆಯೋಗದ ಅಧ್ಯಕ್ಷರು ಹೇಳಿದ್ದಾರೆ. ಇವತ್ತೇ ತೀರ್ಮಾನ ಆಗದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಆಯೋಗವೇ ಹೊಣೆ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.
