ಜಿಎಸ್‌ಟಿ ಸುಧಾರಣೆಗಳು ಸೆ. 22 ರಿಂದ ಜಾರಿಯಾಗಿವೆ. ಈ ಸುಧಾರಣೆಗಳ ಲಾಭ ಜನರಿಗೆ ನೇರವಾಗಿ ತಲುಪುವಂತೆ ಮಾಡಲು ಸಂಸದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ನಗರದ ಅಂಗಡಿ, ಮುಂಗಟ್ಟು ಮತ್ತು ವಿಮಾ ಕಚೇರಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರ (ಸೆ.26): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆಯಾಗಿ ಜಿಎಸ್‌ಟಿ ಸುಧಾರಣೆಗಳು ಸೆ. 22 ರಿಂದ ಜಾರಿಯಾಗಿವೆ. ಈ ಸುಧಾರಣೆಗಳ ಲಾಭ ಜನರಿಗೆ ನೇರವಾಗಿ ತಲುಪುವಂತೆ ಮಾಡಲು ಸಂಸದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ನಗರದ ಅಂಗಡಿ, ಮುಂಗಟ್ಟು ಮತ್ತು ವಿಮಾ ಕಚೇರಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಎಲ್‌ಐಸಿ ಕಚೇರಿ, ದಿನಸಿ ಅಂಗಡಿಗಳು, ದ್ವಿಚಕ್ರ ವಾಹನ, ಟ್ರ್ಯಾಕ್ಟರ್‌ ಶೋರೂಮ್‌ಗಳಿಗೆ ಹಾಗೂ ಉದ್ಯಮ ಸಂಸ್ಥೆಗಳಿಗೆ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್, ಸ್ಥಳೀಯ ನಾಗರಿಕರು, ವ್ಯಾಪಾರಿಗಳು, ಸೇವಾ ಪೂರೈಕೆದಾರರೊಂದಿಗೆ ಚರ್ಚೆ ನಡೆಸಿದರು. ಹೊಸ ಜಿಎಸ್‌ಟಿಯಿಂದಾಗಿ ಕುಟುಂಬದ ಖರ್ಚುಗಳಲ್ಲಿ ಇಳಿಕೆ, ಅಗತ್ಯ ವಸ್ತುಗಳ ಬೆಲೆ ಇಳಿಕೆ ಮತ್ತು ಎಲ್ಲರೂ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಅವರು ಜನರಿಗೆ ವಿವರಿಸಿದರು.

ಶೇ. 5 ಅಥವಾ ಶೇ18ರ ಸ್ಲ್ಯಾಬ್‌: ಜಿಎಸ್‌ಟಿ ಅಡಿ ಬರುವ ಶೇ .99ರಷ್ಟು ಸರಕು ಮತ್ತು ಸೇವೆಗಳು ಈಗ ಶೇ. 5 ಅಥವಾ ಶೇ18ರ ಸ್ಲ್ಯಾಬ್‌ಗಳಡಿ ಬರುತ್ತಿವೆ. ಕೇವಲ ಶೇ1 ರಷ್ಟು ಸರಕುಗಳಿಗೆ ಮಾತ್ರ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಆರೋಗ್ಯ ವಿಮೆ ಹಾಗೂ ಜೀವ ವಿಮೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ಪ್ರತಿ ಕುಟುಂಬಗಳು ಜೀವನ ಹಾಗೂ ಆರೋಗ್ಯ ವಿಷಯದಲ್ಲಿ ಭದ್ರತೆ ಪಡೆಯಬಹುದು ಎಂದು ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ಈ ಸುಧಾರಣೆಗಳು ಕೇವಲ ಕಾಗದದ ಮೇಲಿನ ಅಕ್ಷರಗಳಲ್ಲ. ಇವು ಪ್ರತಿ ಕುಟುಂಬಕ್ಕೂ ತೃಪ್ತಿ ಹಾಗೂ ಸಮಾಧಾನ ತಂದಿವೆ. ದಿನಸಿ, ಗೃಹೋಪಯೋಗಿ ವಸ್ತುಗಳು ಮತ್ತು ದಿನನಿತ್ಯದ ಬಳಕೆಯ ಸರಕುಗಳ ಜಿಎಸ್‌ಟಿ ಶೇ12 ರಿಂದ ಶೇ 5 ಗೆ ಇಳಿದಿರುವುದರಿಂದ ಪ್ರತಿ ಕುಟುಂಬ ತಿಂಗಳಿಗೆ ಶೇ. 7 ರಿಂದ ಶೇ.12 ರಷ್ಟು ಹಣ ಉಳಿತಾಯ ಮಾಡಬಹುದು. ವ್ಯಾಪಾರಿಗಳು ಈ ಸುಧಾರಣೆಗಳ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಮನವಿ ಮಾಡಿದರು.

ತೆರಿಗೆ ಇನ್ನಷ್ಟು ಸರಳೀಕರಣ

ಸಾಮಾನ್ಯ ಜನರಿಗೆ ಇನ್ನಷ್ಟು ಪ್ರಯೋಜನಗಳನ್ನು ನೀಡಲು ಹಾಗೂ ವ್ಯಾಪಾರಿಗಳಿಗೆ ಸಹಕಾರ ನೀಡಲು, ಕೇಂದ್ರ ಸರ್ಕಾರವು ತೆರಿಗೆ ಪ್ರಕ್ರಿಯೆಗಳನ್ನು ಇನ್ನಷ್ಟು ಸರಳೀಕರಣಗೊಳಿಸಲಿದೆ. ಹಾಗೆಯೇ ಡಿಜಿಟಲ್ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ವರ್ತಕರು ಹಾಗೂ ಉದ್ಯಮದವರಿಗೆ ಭರವಸೆ ನೀಡಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಮುರಳಿಧರ್, ಬಿಜೆಪಿ ಮುಖಂಡ ಸೀಕಲ್ ಆನಂದ್ ಗೌಡ, ಜಿಲ್ಲಾ ಮಾಧ್ಯಮ ವಕ್ತಾರ ಮಧುಚಂದ್ರ, ತಾ.ಕಾರ್ಯದರ್ಶಿ ಆರ್ ಹೆಚ್ ಎನ್ ಅಶೋಕ್ ಕುಮಾರ್, ಮುಖಂಡರಾದ ಸುರೇಂದ್ರಗೌಡ, ಸಂತೋಷ್, ನರಸಪ್ಪ,ಬಿ.ಎನ್.ಗಂಗಾಧರಪ್ಪ. ಎಸ್ಆರ್ ಎಸ್ ದೇವರಾಜ್,ಮುನಿಕೃಷ್ಣ , ಮೂರ್ತಿನಾಯಕ್, ಕೋಲಾಟ್ಲು ಸುದರ್ಶನ್, ಗಿರೀಶ್ ಗರಿಗರೆಡ್ಡಿ, ಹನುಮಂತಪ್ಪ, ಅನು ಆನಂದ್, ಮತ್ತಿತರರು ಇದ್ದರು.