ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಶಾಲೆಯ ಮೇಲ್ಛಾವಣಿ ಭೀಕರ ಬಿರುಗಾಳಿಗೆ ಹಾರಿಹೋಗಿದೆ. ಊಟದ ಸಮಯದಲ್ಲಿ ಘಟನೆ ನಡೆದಿದ್ದರಿಂದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು (ಫೆ.13) ದಿಢೀರ್ ಕಾಣಿಸಿಕೊಂಡ ಭೀಕರ ಬಿರುಗಾಳಿಗೆ ಶಾಲೆಯೊಂದರ ಮೇಲ್ಛಾವಣಿ ಹಾರಿಹೋದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಶಾಲೆಯ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೆಂಚುಗಳು ರಭಸವಾದ ಗಾಳಿಗೆ ಹಾರಿ ನೆಲಕ್ಕೆ ಬಿದ್ದು ಪುಡಿಪುಡಿಯಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಪ್ಪಿದ ಭಾರೀ ಅನಾಹುತ

ಅದೃಷ್ಟವಶಾತ್ ಈ ಘಟನೆ ನಡೆದಿದ್ದು ಮಧ್ಯಾಹ್ನ ಊಟದ ಸಮಯದಲ್ಲಿ. ಶಾಲಾ ಮಕ್ಕಳು ಕೊಠಡಿಯಿಂದ ಹೊರಬಂದು ಊಟಕ್ಕೆ ಕುಳಿತಿದ್ದರಿಂದ ಒಂದು ದೊಡ್ಡ ಮಟ್ಟದ ಪ್ರಾಣಾಪಾಯ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಒಂದು ವೇಳೆ ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದರೆ ಭಾರೀ ಅಪಾಯ ಎದುರಾಗುತ್ತಿತ್ತು.

ಇಬ್ಬರು ಮಕ್ಕಳಿಗೆ ಗಾಯ

ಬಿರುಗಾಳಿಯ ರಭಸಕ್ಕೆ ಹೆಂಚುಗಳು ಹಾರಿ ಬಿದ್ದಿವೆ. ಈ ವೇಳೆ ಅಲ್ಲಿಯೇ ಇದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹೆಂಚುಗಳು ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಪೋಷಕರು ಮತ್ತು ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಅಧಿಕಾರಿಗಳ ಭೇಟಿ, ಪರಿಶೀಲನೆ

ವಿಷಯ ತಿಳಿಯುತ್ತಿದ್ದಂತೆಯೇ ಬೆಳವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿರುಗಾಳಿಯಿಂದಾಗಿ ಶಾಲಾ ಕಟ್ಟಡಕ್ಕೆ ಆಗಿರುವ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

YouTube video player