Bagalkot house wall collapse: ಬಾಗಲಕೋಟೆ ಜಿಲ್ಲೆಯ ಮಹಾಲಿಂಗಾಪುರದಲ್ಲಿ ನಿರಂತರ ಮಳೆಯಿಂದಾಗಿ ಹಳೆಯ ಮನೆಯ ಗೋಡೆ ಕುಸಿದು ದರ್ಶನ್ ಲಾತೂರ (11) ಎಂಬ ಬಾಲಕ ಮೃತಪಟ್ಟಿದ್ದಾನೆ. ಈ ದುರ್ಘಟನೆಯಲ್ಲಿ ಮತ್ತೋರ್ವ ಬಾಲಕ ಶ್ರೀಶೈಲ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬಾಗಲಕೋಟೆ (ಸೆ.27): ನಿರಂತರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಾಪುರದ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದರ್ಶನ್ ಲಾತೂರ (11 ) ಮೃತ ಬಾಲಕ, ಇನ್ನೋರ್ವ ಬಾಲಕ ಶ್ರೀಶೈಲಗೆ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು (ಸೆಪ್ಟೆಂಬರ್ 27, 2025) ಬೆಳಗಿನ ಜಾವ 5 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ನಾಗಪ್ಪ ಲಾತೂರ್ ಎಂಬುವವರ ಮಕ್ಕಳಾದ ಮಗ ದರ್ಶನ್ ಮತ್ತು ಶ್ರೀಶೈಲ ತಾಯಿಯೊಂದಿಗೆ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದರು. ಬೆಳಿಗ್ಗೆ ತಾಯಿ ಎದ್ದು ಬೇರೆ ಕೊಠಡಿಗೆ ತೆರಳುತ್ತಿದ್ದಂತೆ ಗೋಡೆ ಮತ್ತು ಛಾವಣಿ ಏಕಾಏಕಿ ಕುಸಿದುಬಿದ್ದಿದೆ. ಈ ಅವಘಡದಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದು, ಶ್ರೀಶೈಲ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಗಾಳಿ, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆಯಿಂದಾಗಿ ಹಳೆಯ ಮನೆಯ ಗೋಡೆಯ ರಚನೆ ದುರ್ಬಲವಾಗಿರುವುದು ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯಿಂದಾಗಿ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.