ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿದೆ ಎನ್ನಲಾದ ಷಡ್ಯಂತ್ರದ ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಎಸ್‌ಐಟಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. 

Add Asianetnews Kannada as a Preferred SourcegooglePreferred

ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮುಖ್ಯಮಂತ್ರಿ, ಗೃಹ ಸಚಿವರು, ಎಸ್‌ಐಟಿ ಅಧಿಕಾರಿಗಳು ಹಾಗೂ ಪೊಲೀಸ್‌ ವೃತ್ತ ನಿರೀಕ್ಷಿಕರಿಗೆ ವೇದಿಕೆಯಿಂದ ಮನವಿ ಸಲ್ಲಿಸಿದ್ದು, ಅವಹೇಳನದಿಂದ ನಿರ್ಮಾಣವಾದ ಅಹಿತಕರ ವಾತಾವರಣ ತಿಳಿಗೊಳಿಸಬೇಕು. ಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಧರ್ಮಸ್ಥಳದ ಬಗ್ಗೆ ಭಕ್ತರ ಮನಸಲ್ಲಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ಕ್ಷೇತ್ರದ ವಿರುದ್ಧ ಹಲವು ಸುಳ್ಳು ಮತ್ತು ಕಪೋಲಕಲ್ಪಿತ ಆರೋಪ ಮಾಡಿದ್ದು, ತನಿಖೆ ನಡೆಯುತ್ತಿರುವ ಸಂದರ್ಭ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಷಡ್ಯಂತ್ರದ ಪರಿಣಾಮವಾಗಿ ತನಿಖೆಗೆ ರಾಜ್ಯ ಸರ್ಕಾರ ಅನಗತ್ಯವಾಗಿ ವೆಚ್ಚ ಮಾಡಿರುವ ಎಲ್ಲಾ ಮೊತ್ತವನ್ನೂ, ಈ ಷಡ್ಯಂತ್ರಕ್ಕೆ ಭಾಗಿಗಳಾದವರಿಂದ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.