ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ, ಚಿಕಿತ್ಸೆ ಮತ್ತು ಮೃತಪಟ್ಟರಾಸುಗಳಿಗೆ ಪರಿಹಾರ ಒದಗಿಸುವ ಸಂಬಂಧ 13 ಕೋಟಿ ರು. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು (ಅ.15): ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ, ಚಿಕಿತ್ಸೆ ಮತ್ತು ಮೃತಪಟ್ಟರಾಸುಗಳಿಗೆ ಪರಿಹಾರ ಒದಗಿಸುವ ಸಂಬಂಧ 13 ಕೋಟಿ ರು. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ ಎರಡು ಕೋಟಿ ರು. ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ಐದು ಕೋಟಿ ರು. ಮತ್ತು ಜಾನುವಾರುಗಳ ಚಿಕಿತ್ಸೆಗೆ ಹಾಗೂ ಲಸಿಕೆಗೆ ಒಟ್ಟು ಎಂಟು ಕೋಟಿ ರು. ಬಿಡುಗಡೆ ಮಾಡುವಂತೆ ಹೇಳಿದರು.

Add Asianetnews Kannada as a Preferred SourcegooglePreferred

ರಾಜ್ಯದ 28 ಜಿಲ್ಲೆಯ 160 ತಾಲೂಕುಗಳ 4380 ಗ್ರಾಮಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ. ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಬೇಕು. ಮರಣ ಹೊಂದಿದ ಜಾನುವಾರುಗಳಿಗೆ 2 ಕೋಟಿ ರು. ನೀಡಲಾಗಿದ್ದು, 46.15 ಲಕ್ಷ ರು. ಪರಿಹಾರ ವಿತರಿಸಲಾಗಿದೆ. ಬಾಕಿ ಪರಿಹಾರ ತ್ವರಿತವಾಗಿ ವಿತರಿಸಬೇಕು ಎಂದು ನಿರ್ದೇಶನ ನೀಡಿದರು. 6.57 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಎಂದು ಅಧಿಕಾರಿಗಳು ಹೇಳಿದರು. 

Jana Sankalpa Yatra: ಕರ್ನಾಟಕ ಕಾಂಗ್ರೆಸ್‌ಗೆ ಎಟಿಎಂ ಆಗಿತ್ತು: ಸಿಎಂ ಬೊಮ್ಮಾಯಿ

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ರೋಗ ತೀವ್ರವಾಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಲು ಸೂಚಿಸಿದರು. ಅಲ್ಲದೇ, ತಕ್ಷಣ 15 ಲಕ್ಷ ಡೋಸ್‌ ಲಸಿಕೆಗಳನ್ನು ಒದಗಿಸಬೇಕು. ಲಸಿಕೆ ಪೂರೈಕೆ ಕುರಿತು ಕೇಂದ್ರ ಸರ್ಕಾರ ಅನುಮೋದಿಸಿದ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್‌, ಪಶು ವೈದ್ಯಕೀಯ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹೀಂ ಇತರರು ಉಪಸ್ಥಿತರಿದ್ದರು.

ಮಳೆ ಹಾನಿ ಸ್ಥಳಕ್ಕೆ ಖುದ್ದು ಹೋಗಿ: ರಾಜ್ಯದಲ್ಲಿ ಮಳೆಯಿಂದಾಗಿ ಉಂಟಾದ ಅನಾಹುತಗಳ ಕುರಿತು ಜಿಲ್ಲಾ ಕೇಂದ್ರಗಳಲ್ಲಿ ಕುಳಿತು ಸಭೆ ಮಾಡುವುದಕ್ಕಿಂತ ಪ್ರತಿ ತಾಲೂಕಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗುರುವಾರ ಬೆಳಗ್ಗೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕಮಲಾಪುರದ ಖಾಸಗಿ ಹೋಟೆಲ್‌ನಲ್ಲಿ ಮಳೆ ಹಾನಿ ಸಂಭವಿಸಿದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದರು.

ಮೋದಿ ಕಾಲಿನಡಿ ಕೂರುವ ಯೋಗ್ಯತೆ ನನಗೆ ಬೇಡ: ಸಿದ್ದರಾಮಯ್ಯ

ನಕಲಿ ಫಲಾನುಭವಿಗಳ ಹೆಸರನ್ನು ಸಂತ್ರಸ್ತರ ಪಟ್ಟಿಯಲ್ಲಿ ಸೇರಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ತಪ್ಪು ಮಾಡಿದರೆ ತಕ್ಷಣ ಅಮಾನತುಗೊಳಿಸಬೇಕು. ನಿಜವಾದ ಫಲಾನುಭವಿಗಳು ಪರಿಹಾರ ವಂಚಿತ ಆಗಬಾರದು. ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾದರೆ 24 ಗಂಟೆಯಲ್ಲಿ ಸಂಪರ್ಕ ಕಲ್ಪಿಸಬೇಕು. ಯಾವುದೇ ಹಳ್ಳಿಗೆ ಮಳೆಯಿಂದ ವಿದ್ಯುತ್‌ ಸಮಸ್ಯೆಯಾದರೆ ಸಹಿಸುವುದಿಲ್ಲ. ಕೆರೆ ಒಡೆದು ಯಾವುದಾದರೂ ಪ್ರಾಣ ಹಾನಿ, ಬೆಳೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಕಟುನಿಟ್ಟಿನ ಸೂಚನೆ ನೀಡಿದರು.