Asianet Suvarna News Asianet Suvarna News

Basavaraj Bommai: ದೇಶಕ್ಕೊಂದೇ ಸಿಆರ್‌ಝಡ್‌ ಕಾನೂನು ಬೇಕು: ಸಿಎಂ ಸಲಹೆ

ಕರ್ನಾಟಕ ರಾಜ್ಯದಲ್ಲಿ 330 ಕಿ.ಮೀ. ಕರಾವಳಿ ಇರುವುದರಿಂದ ಅಲ್ಲಿ ಬಂದರುಗಳ ನಿರ್ಮಾಣ, ವಾಣಿಜ್ಯೋದ್ಯಮ ಮತ್ತು ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದಕ್ಕಾಗಿ ಈಗಿರುವ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝೆಡ್‌) ಕಾನೂನಿನಲ್ಲಿ ಬದಲಾವಣೆ ಅಗತ್ಯ ಇದೆ.

CM Basavaraj Bommai Says Country Needs a Single CRZ Law gvd
Author
Bangalore, First Published Jan 18, 2022, 4:00 AM IST

ಬೆಂಗಳೂರು (ಜ.18):  ಕರ್ನಾಟಕ (Karnataka) ರಾಜ್ಯದಲ್ಲಿ 330 ಕಿ.ಮೀ. ಕರಾವಳಿ ಇರುವುದರಿಂದ ಅಲ್ಲಿ ಬಂದರುಗಳ ನಿರ್ಮಾಣ, ವಾಣಿಜ್ಯೋದ್ಯಮ ಮತ್ತು ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದಕ್ಕಾಗಿ ಈಗಿರುವ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝೆಡ್‌) ಕಾನೂನಿನಲ್ಲಿ ಬದಲಾವಣೆ ಅಗತ್ಯ ಇದೆ. ಈ ನಿಟ್ಟಿನಲ್ಲಿ ದೇಶಕ್ಕೆ ಒಂದೇ ಸಿಆರ್‌ಝಡ್‌ ಕಾನೂನು (CRZ Law) ತರುವುದು ಸೂಕ್ತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಲಹೆ ನೀಡಿದರು.

ಸೋಮವಾರ ‘ಪ್ರಧಾನಮಂತ್ರಿ ಗತಿಶಕ್ತಿ ಯೋಜನೆ’ಯ ದಕ್ಷಿಣ ವಲಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಗತಿಶಕ್ತಿ ಕಾರ್ಯಕ್ರಮ ಹೊಸ ಶಕೆಯನ್ನು ಆರಂಭಿಸಲಿದ್ದು, ಯೋಜನೆಯು ರಾಷ್ಟ್ರ ನಿರ್ಮಾಣದ ದೂರದೃಷ್ಟಿಯಿಂದ ರೂಪಿತವಾದ ಕಾರ್ಯಕ್ರಮವಾಗಿದೆ ಎಂದರು.

Basavaraj Bommai: ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಜನವರಿ 28ಕ್ಕೆ 6 ತಿಂಗಳು

ಕೇಂದ್ರ ಸರ್ಕಾರದ ಮಟ್ಟದಲ್ಲಿ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಗಮನ ಸೆಳೆದ ಅವರು, ಪರಿಸರ ಹಾಗೂ ಅರಣ್ಯ ಇಲಾಖೆ ಅನುಮೋದನೆಗಳು, ಆರ್ಥಿಕ ವಲಯದಲ್ಲಿ ಕೆಲವು ಕಾನೂನುಗಳನ್ನು ಸರಳೀಕರಿಸುವ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಲು ಸಾಧ್ಯ. ಅಂತರ ರಾಜ್ಯ ಜಲ ವಿವಾದಗಳಿಂದ ನೀರಾವರಿ ಯೋಜನೆಗಳಲ್ಲಿ ವಿಳಂಬವಾಗುತ್ತಿದ್ದು, ಇದಕ್ಕೆ ಸಂಬಂಧಿ​ಸಿದಂತೆ ಕಾನೂನು ಮಧ್ಯಸ್ಥಿಕೆಗಳ ಅಗತ್ಯವೂ ಇದ್ದು, ಇವುಗಳ ಬಗ್ಗೆ ಮತ್ತೊಮ್ಮೆ ಗಮನಹರಿಸಬೇಕು ಎಂದರು.

ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯನ್ನು ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲಾ ಅಂಶಗಳು ರಾಜ್ಯದಲ್ಲಿದ್ದು, ರಸ್ತೆ, ರೈಲ್ವೆ, ಬಂದರುಗಳನ್ನು ಅಭಿವೃದ್ಧಿಪಡಿಸಲಾಗಿದೆ. ಐದು ವಿಮಾನ ನಿಲ್ದಾಣಗಳು, ಒಳನಾಡು ಜಲಸಾರಿಗೆ, ಕೆ-ರೈಡ್‌ ಮುಂತಾದವುಗಳನ್ನು ಹೊಂದಿದೆ. ರೈಲು ಉತ್ಪಾದನೆಯಲ್ಲಿ 50-50 ಪಾಲುದಾರಿಕೆಯನ್ನು ಹೊಂದಿದ ಮೊದಲ ರಾಜ್ಯ. ರೈಲ್ವೆ ಯೋಜನೆಗಳಿಗೆ ಭೂ ಸ್ವಾಧೀನ ಮತ್ತು ಬಂಡವಾಳ ಮೂಲಕ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಈ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕಿದೆ. 

ಬೆಂಗಳೂರು-ಮೈಸೂರು-ಹೈದರಾಬಾದ್‌ಗೆ ಹೈಸ್ಪೀಡ್‌ ರೈಲು ಪ್ರಮುಖ ಯೋಜನೆಯಾಗಿದೆ. 453 ಕಿ.ಮೀ. ಉದ್ದದ ಈ ಯೋಜನೆಯನ್ನು ಮೇಲ್ದರ್ಜೆಗೇರಿಸುವುದರಿಂದ ಎರಡೂ ರಾಜ್ಯಗಳ ನಡುವಿನ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು. ಕರ್ನಾಟಕ ರಾಜ್ಯ ಅಭಿವೃದ್ಧಿ ಮತ್ತು ದೇಶದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಐತಿಹಾಸಿಕವಾಗಿ ರಾಜ್ಯ ಮೊದಲಿನಿಂದಲೂ ಸಾರ್ವಜನಿಕ ವಲಯದ ಕೈಗಾರಿಕೆಗಳನ್ನು ಹೊಂದಿದ್ದು, ಕೇಂದ್ರ ಮತ್ತು ಅಂತರ ರಾಜ್ಯ ಸಹಕಾರದಲ್ಲಿ ಕರ್ನಾಟಕ ಸದಾ ಸಮನ್ವಯ ಸಾ​ಧಿಸಿದೆ ಎಂದು ಹೇಳಿದರು.

National Start-up Day ಐಟಿ-ಬಿಟಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನ

ಚುಚ್ಚುಮದ್ದು ಪಡೆದ ಮಕ್ಕಳ ಸಾವಿನ ಸಮಗ್ರ ವರದಿ ಕೊಡಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. ಧಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

Follow Us:
Download App:
  • android
  • ios