ನೂತನ ಪಿಂಚಣಿ ಯೋಜನೆ ರದ್ದತಿ ಬಗ್ಗೆ ಸಿಎಂ ಬಿಎಸ್ವೈ ಸ್ಪಷ್ಟನೆ
ನೂತನ ಪಿಂಚಣಿ ಯೋಜನೆಯಲ್ಲಿ ಕೆಲವು ಬದಲಾವಣೆ ಇಲ್ಲವೇ ಮಾರ್ಪಾಡು ಮಾಡಲು ಅಧಿಕಾರಿಗಳ ಸಮಿತಿ ರಚನೆ| ಸಮಿತಿ ವರದಿ ನೀಡಿದ ನಂತರ ಸೂಕ್ತ ಕ್ರಮ| ಸೌಲಭ್ಯಗಳಿಗೆ ಕಾರ್ಯವಿಧಾನ ರಚಿಸಿ ಕೆಲವು ಮಾರ್ಗಸೂಚಿ ಹೊರಡಿಸಲು ಸರ್ಕಾರ ಪರಿಶೀಲನೆ|
ಬೆಂಗಳೂರು(ಮಾ.05): ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ನೂತನ ಪಿಂಚಣಿ ಯೋಜನೆಯಲ್ಲಿ ಕೆಲವು ಬದಲಾವಣೆ ಇಲ್ಲವೇ ಮಾರ್ಪಾಡು ಮಾಡಲು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿ ವರದಿ ನೀಡಿದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.
ರಾಜ್ಯದ ಪಿಂಚಣಿದಾರರಿಗೆ ಬಿಗ್ ಶಾಕ್ ಕೊಟ್ಟ ಸಚಿವ ಅಶೋಕ್
ನೂತನ ಪಿಂಚಣಿ ಯೋಜನೆಯಿಂದ 1/4/2006ರ ನಂತರ ನೇಮಕವಾಗಿರುವ ನೌಕರರಿಗೆ ತೊಂದರೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದ ಸಭಾನಾಯಕರು, ಮರಣ ಮತ್ತು ನಿವೃತ್ತಿ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 1-4-2018ರಿಂದ ವಿಸ್ತರಿಸಲಾಗಿದ್ದು, ಈ ಸೌಲಭ್ಯಗಳಿಗೆ ಕಾರ್ಯವಿಧಾನ ರಚಿಸಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರ ಪರಿಶೀಲಿಸುತ್ತಿದೆ ಎಂದರು.